ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

ಗುಡುಗು-ಮಿಂಚಿನೊಂದಿಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
Southwest Monsoon Active Across India
ಕಾವೇರಿ ಪ್ರತಿಭಟನೆ ಮತ್ತು ಮಾನ್ಸೂನ್ ಮಳೆ (ಸಂಗ್ರಹ ಚಿತ್ರ)
Updated on

ನವದೆಹಲಿ: ಕಾವೇರಿ ನದಿ ನೀರು ಹಂಚಿಕ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವಿವಾದ ಭುಗಿಲೆದ್ದಿರುವಂತೆಯೇ ಉಭಯ ರಾಜ್ಯಗಳಿಗೆ ಹವಾಮಾನ ಇಲಾಖೆ ಬಿಗ್ ರಿಲೀಫ್ ನೀಡುವ ಸುದ್ದಿಯೊಂದನ್ನು ನೀಡಿದೆ.

ಹೌದು.. ಇಷ್ಟು ದಿನ ದಕ್ಷಿಣ ಭಾರತದಲ್ಲಿ ಮಂಕಾಗಿದ್ದ ಮಾನ್ಸೂನ್ ಮಾರುತಗಳಿಂದಾಗಿ ಮಳೆ ಕೊರತೆ ಉಂಟಾಗಿ ನೀರಿನ ಕೊರತೆ ಏರ್ಪಟ್ಟಿದೆ. ಇದು ಕರ್ನಾಟಕ ಮತ್ತು ತಮಿಳುನಾಡು ನಡುವೆ ತಿಕ್ಕಾಟಕ್ಕೆ ಕಾರಣವಾಗಿರುವಂತೆಯೇ ಹವಾಮಾನ ಇಲಾಖೆ ಉಭಯ ರಾಜ್ಯಗಳ ಜನತೆಗೆ ಸಿಹಿಸುದ್ದಿ ನೀಡಿದೆ.

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯೊಂದಿಗೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಈ ಬಗ್ಗೆ ಕೇಂದ್ರ ಹವಾಮಾನ ಇಲಾಖೆಯ ವಿಜ್ಞಾನಿ ನೀತಾ ಕೆ. ಗೋಪಾಲ್ ಮಾತನಾಡಿ, ಮಧ್ಯ ಹಾಗೂ ಪೂರ್ವ ಭಾರತದ ಮೇಲೆ ಸಕ್ರಿಯವಾಗಿರುವ ಹವಾಮಾನ ವ್ಯವಸ್ಥೆಗಳ ಪರಿಣಾಮ ನೈಋತ್ಯ ಮುಂಗಾರು ಬಲಗೊಂಡಿದೆ ಎಂದು ತಿಳಿಸಿದ್ದಾರೆ.

"ದೇಶದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಮಧ್ಯ, ಪಶ್ಚಿಮ, ಪೂರ್ವ ಹಾಗೂ ಈಶಾನ್ಯ ಭಾರತದ ಕೆಲವೆಡೆ ಅತಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ" ಎಂದು ಅವರು ಹೇಳಿದರು.

Southwest Monsoon Active Across India
ಕಾವೇರಿ ಹೋರಾಟ: 'ಕೈ ಮುಗಿದು ಕೇಳುತ್ತೇನೆ.. ಬಂದ್ ಬೇಡ, ರಾಜ್ಯದ ಹಿತ ಕಾಪಾಡಲು ಎಲ್ಲಾ ಕಾನೂನು ಹೋರಾಟ ನಡೆಸಿದ್ದೇವೆ'; CM ಮನವಿ; Video

ಈ ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಲಿದೆ

ಐಎಂಡಿ ಮುನ್ಸೂಚನೆಯ ಪ್ರಕಾರ, ಕೊಂಕಣ-ಗೋವಾ, ಮಧ್ಯ ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ.

ಇದಲ್ಲದೆ ಉತ್ತರಾಖಂಡ, ಹಿಮಾಚಲ ಪ್ರದೇಶ, ಪೂರ್ವ ರಾಜಸ್ಥಾನ ಹಾಗೂ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಸ್ಥಳೀಯ ಪ್ರವಾಹ ಹಾಗೂ ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೂ ಮಳೆ ಮುನ್ಸೂಚನೆ

ದಕ್ಷಿಣ ಭಾರತದ ಕೇರಳ, ಕರಾವಳಿ ಕರ್ನಾಟಕ, ಒಳನಾಡು ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣದಲ್ಲಿ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ನೀತಾ ಕೆ. ಗೋಪಾಲ್ ತಿಳಿಸಿದ್ದಾರೆ.

ಐಎಂಡಿ ಎಚ್ಚರಿಕೆ

ಅಂತೆಯೇ ಭಾರೀ ಮಳೆಯಾಗುವ ಸಾಧ್ಯತೆ ಇರುವ ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರಬೇಕು. ನೀರು ನಿಂತಿರುವ ಪ್ರದೇಶಗಳಿಗೆ ತೆರಳುವುದನ್ನು ತಪ್ಪಿಸಬೇಕು ಹಾಗೂ ಸ್ಥಳೀಯ ಆಡಳಿತ ಮತ್ತು ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸಬೇಕು ಎಂದು ಐಎಂಡಿ ಸಲಹೆ ನೀಡಿದೆ.

ಗುಡುಗು-ಮಿಂಚಿನೊಂದಿಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕೃಷಿಗೆ ಅನುಕೂಲ, ಆದರೆ ಅಪಾಯವೂ ಇದೆ

ನೈಋತ್ಯ ಮುಂಗಾರು ಸಾಮಾನ್ಯ ರೀತಿಯಲ್ಲಿ ಮುಂದುವರಿಯುತ್ತಿದ್ದು, ದೇಶದ ಹಲವು ಭಾಗಗಳಲ್ಲಿ ಕೃಷಿಗೆ ಅನುಕೂಲಕರ ಮಳೆಯಾಗುವ ನಿರೀಕ್ಷೆಯಿದೆ ಎಂದು ನೀತಾ ಕೆ. ಗೋಪಾಲ್ ಹೇಳಿದರು.

ಆದರೆ, ಅಲ್ಪಾವಧಿಯಲ್ಲಿ ಅತಿಯಾದ ಮಳೆಯಾದರೆ ಹಠಾತ್ ಪ್ರವಾಹ, ನಗರ ಪ್ರದೇಶಗಳಲ್ಲಿ ಜಲಾವೃತ, ಸಂಚಾರ ಅಸ್ತವ್ಯಸ್ತ ಹಾಗೂ ಜನಜೀವನದ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಹವಾಮಾನ ಪರಿಸ್ಥಿತಿಯನ್ನು ಭಾರತೀಯ ಹವಾಮಾನ ಇಲಾಖೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಅಗತ್ಯಕ್ಕೆ ಅನುಗುಣವಾಗಿ ಹೊಸ ಮುನ್ಸೂಚನೆ ಹಾಗೂ ಎಚ್ಚರಿಕೆಗಳನ್ನು ಪ್ರಕಟಿಸಲಾಗುವುದು ಎಂದು ಐಎಂಡಿ ತಿಳಿಸಿದೆ.

ಸಾರ್ವಜನಿಕರು ಅಧಿಕೃತ ಹವಾಮಾನ ಬುಲೆಟಿನ್‌ಗಳು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆಗಳನ್ನು ಗಮನಿಸುವಂತೆ ಮನವಿ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com