

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಹತ್ವದ ಜಂಟಿ ಸಭೆ ನಡೆಸಿದರು. ಸುಗಮ ಆಡಳಿತಕ್ಕೆ ಸರ್ಕಾರಿ ಅಧಿಕಾರಿಗಳೇ ಬೆನ್ನೆಲುಬು. ಯಾವುದೇ ಕಾರಣಕ್ಕೂ ಯಾರ ಒತ್ತಡಕ್ಕೂ ಮಣಿಯದೇ ಕೆಲಸ ಮಾಡುವಂತೆ ಸೂಚಿಸಿದರು.
ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೊಡಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಕಠಿಣ ಸೂಚನೆ ನೀಡಿದರು. ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರುಸಹಿತ ಕಿತ್ತೊಗೆಯಬೇಕು. ರೌಡಿಗಳ ಹೆಡೆಮುರಿ ಕಟ್ಟಿ ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ ಮುಕ್ತವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದರು.
ಇದೇ ವೇಳೆ, ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಯಾವುದೇ ರಾಜಕೀಯ ಪ್ರಭಾವ ಅಥವಾ ಒತ್ತಡಕ್ಕೆ ಮಣಿಯದೆ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವಂತೆ ಡಿಕೆಶಿ ಸೂಚನೆ ನೀಡಿದರು. ಎಲ್ಲಾ ಇಲಾಖೆಯಲ್ಲಿನ ಬಾಕಿ ಕೆಲಸಗಳನ್ನು ಆದಷ್ಟು ಬೇಗ ಮುಗಿಸಿ ನನಗೆ 25 ದಿನದಲ್ಲಿ ವರದಿ ಕೊಡಬೇಕು ಎಂದರು. ರಾಜ್ಯದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ ದುರ್ಬಳಕೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ತಕ್ಷಣವೇ ಬ್ರೇಕ್ ಹಾಕಿ, ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು’ ಎಂದು ಗುಡುಗಿದರು. ಪ್ರತಿಯೊಬ್ಬ ಅಧಿಕಾರಿಯೂ ನಿಮ್ಮ ಆತ್ಮಸಾಕ್ಷಿ ಒಪ್ಪುವ ಹಾಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಿ. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ. ಜನ ಮೆಚ್ಚುವ ಹಾಗೇ ಕೆಲಸ ಮಾಡಿ. ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ ಎಂದು ಅಧಿಕಾರಿಗಳಿಗೆ ಸೂಚಿಸಿದರು
Advertisement