

ಬೆಂಗಳೂರು: ಕಾನೂನು ಎಲ್ಲರಿಗೂ ಸಮಾನವಾಗಿದ್ದು, ಅದನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕಾನೂನು ಮತ್ತು ಸುವ್ಯವಸ್ಥೆ, ಮಾದಕ ವಸ್ತುಗಳ ಹಾವಳಿ, ಮಹಿಳೆಯರ ಸುರಕ್ಷತೆ ಹಾಗೂ ಸಂಚಾರ ನಿರ್ವಹಣೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿರುವುದಾಗಿ ತಿಳಿಸಿದರು.
ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಪಡಿಸಲು ಅಗತ್ಯ ಸಲಹೆಗಳು ಹಾಗೂ ನಿರ್ದೇಶನಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಹೇಳಿದರು.
ಮಾದಕ ವಸ್ತುಗಳ ಜಾಲವನ್ನು ಮಟ್ಟಹಾಕುವುದು, ಮಹಿಳೆಯರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಟ್ರಾಫಿಕ್ ಸಮಸ್ಯೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ನಕಲಿ ಸುದ್ದಿಗಳು ಮತ್ತು ಪ್ರಚೋದನಕಾರಿ ವಿಷಯಗಳ ಬಗ್ಗೆ ಮಾಹಿತಿ ತಂತ್ರಜ್ಞಾನ (ಐಟಿ) ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲನೆ ನಡೆಸುತ್ತಿವೆ. ದ್ವೇಷ, ಅಶಾಂತಿ ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿವಿಐಪಿ ಸಂಚಾರದ ವೇಳೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕುರಿತೂ ಸಭೆಯಲ್ಲಿ ಚರ್ಚೆ ನಡೆದಿದ್ದು, ಜನರ ಸಂಚಾರಕ್ಕೆ ಉಂಟಾಗುವ ಅಡಚಣೆಗಳನ್ನು ಕಡಿಮೆ ಮಾಡುವ ಮಾರ್ಗಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಆದರೆ, ಈ ಸಂಬಂಧ ಹೊಸ ವ್ಯವಸ್ಥೆಗಳನ್ನು ಜಾರಿಗೆ ತರಲು ಸ್ವಲ್ಪ ಸಮಯ ಬೇಕಾಗಬಹುದು ಎಂದು ಸ್ಪಷ್ಟಪಡಿಸಿದರು.
ಪ್ರಸ್ತುತ ಸರ್ಕಾರ ಸಾರ್ವಜನಿಕರ ಸುರಕ್ಷತೆ, ಕಾನೂನು ಸುವ್ಯವಸ್ಥೆ ಮತ್ತು ನಗರ ಸಂಚಾರ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
Advertisement