

ಬೆಂಗಳೂರು: ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ಮನವೊಲಿಸಲು ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನಡೆಸಿದ ಯತ್ನ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.
ಈ ಬೆಳವಣಿಗೆಯ ನಡುವೆ ರಾಮಲಿಂಗಾ ರೆಡ್ಡಿಯವರು ತಮ್ಮ ರಾಜೀನಾಮೆಯನ್ನು ಹಿಂಪಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ರಾಮಲಿಂಗಾರೆಡ್ಡಿ ರಾಜೀನಾಮೆ ಸಲ್ಲಿಸಿದ ನಂತರ, ಜಯನಗರದ ಖಾಸಗಿ ಹೊಟೇಲ್ನಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ರಾಮಲಿಂಗಾ ರೆಡ್ಡಿ ಅವರ ನಡುವೆ ಒನ್ ಟು ಒನ್ ಮಾತುಕತೆ ನಡೆದಿದ್ದು, ಸತತ 2.30 ಗಂಟೆಗಳ ಕಾಲ ಮನವೊಲಿಸುವ ಪ್ರಯತ್ನ ನಡೆಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಇಡೀ ಸಮಯವೂ ಮುಖ್ಯವಾಗಿ ಖಾತೆ ಹಂಚಿಕೆ, ಸಚಿವ ಸ್ಥಾನ, ಮತ್ತು ಪಕ್ಷದ ಒಳಗಿನ ಅಸಮಾಧಾನ ಕುರಿತಂತೆ ಚರ್ಚೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ.
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿಯವರು, ರಾಜೀನಾಮೆ ವಾಪಸ್ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡದೆ, ‘ಕಮ್ಯುನಿಕೇಶನ್ ಗ್ಯಾಪ್ ಆಗಿದೆ ಅಷ್ಟೇ’ ಎಂದು ಮಾರ್ಮಿಕವಾಗಿ ನುಡಿದರು.
‘ಅವರು ಏನ್ ಹೇಳಿದ್ರು ನಿಮಗೆ, ಅದನ್ನೇ ನಾನು ಹೇಳೋದು. ಎಲ್ಲಾ ನಿವಾರಣೆ ಆಗಿದೆ, ಹೋಗಿ…’ ಎಂದು ಮಾರ್ಮಿಕವಾಗಿ ಹೇಳಿ ಹೊರಟಿದ್ದಾರೆ. ಇದು ಸಮಸ್ಯೆ ಬಗೆಹರಿದಿದೆಯೋ, ಇಲ್ಲವೋ ಎಂಬ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಬೆಂಗಳೂರಿನ ಅಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಅಂತಿಮವಾಗಿ ಆ ಖಾತೆಯನ್ನು ಮತ್ತೊಬ್ಬ ಸಚಿವರಿಗೆ ನೀಡಲಾಗಿದ್ದು, ಬದಲಿಗೆ ಜಲಸಂಪನ್ಮೂಲ ಇಲಾಖೆಯನ್ನು ನೀಡಿದ್ದರಿಂದ ಅಸಮಾಧಾನಗೊಂಡ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ತಮ್ಮ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಬಹಿರಂಗವಾಗಿ ಹೇಳಿದ್ದರು.
ಇದರಿಂದ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ರಾಜಕೀಯ ಸಂಕಷ್ಟ ಎದುರಾದಂತಾಯಿತು.
ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ರಾಮಲಿಂಗಾ ರೆಡ್ಡಿ ತಮ್ಮ ಆಪ್ತ ಸ್ನೇಹಿತ ಎಂದು ಹೇಳಿ, ಯಾವುದೇ ಆತಂಕದ ಅಗತ್ಯವಿಲ್ಲ ಎಂದು ಸಮಾಧಾನಪಡಿಸುವ ಪ್ರಯತ್ನ ನಡೆಸಿದ್ದರು.
ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಕೂಡ ಮಧ್ಯಪ್ರವೇಶಿಸಿದ್ದು, ರಾಮಲಿಂಗಾ ರೆಡ್ಡಿ ಅವರನ್ನು ಮತ್ತೆ ಸಚಿವ ಸಂಪುಟದಲ್ಲಿ ಮುಂದುವರಿಸುವ ನಿಟ್ಟಿನಲ್ಲಿ ಮಾತುಕತೆಗಳು ನಡೆಯುತ್ತಿವೆ ಎನ್ನಲಾಗಿದೆ.
Advertisement