

ಶಿವಮೊಗ್ಗ: ಸಂಪುಟ ವಿಸ್ತರಣೆ ವೇಳೆ ತಮಗೆ ಸಚಿವ ಸ್ಥಾನ ನೀಡಬೇಕೆಂದು ಹಲವು ನಾಯಕರು ಬೇಡಿಕೆ ಇಡುವುದು ಸಹಜ.ಯಾರನ್ನು ಸಚಿವರನ್ನಾಗಿ ಮಾಡಬೇಕು,ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಹೈ ಕಮಾಂಡ್ ಗೆ ಚೆನ್ನಾಗಿ ತಿಳಿದಿದೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ನಂತರ ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ತಮ್ಮನ್ನು ಮತ್ತೆ ಶಿಕ್ಷಣ ಸಚಿವರನ್ನಾಗಿ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ. ಪಕ್ಷ ಏನೇ ತೀರ್ಮಾನ ಕೈಗೊಂಡರೂ ಅದನ್ನು ಪಾಲಿಸುತ್ತೇನೆ ಎಂದರು.
ಪ್ರಸ್ತುತ ಮುಖ್ಯಮಂತ್ರಿ ಬಳಿಯೇ ಶಿಕ್ಷಣ ಖಾತೆ ಇದೆ. ಶಿಕ್ಷಣ ಸಚಿವರಿಲ್ಲ ಎಂಬ ಕಾರಣಕ್ಕೆ ಇಲಾಖೆಯ ಕಾರ್ಯ ಗಳು ಸ್ಥಗಿತಗೊಂಡಿವೆ ಎಂದು ಹೇಳುವುದು ಸರಿಯಲ್ಲ. ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡ ತಕ್ಷಣವೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ಮಹತ್ವದ ಆದೇಶಗಳನ್ನು ಹೊರಡಿಸಿದ್ದಾರೆ. ತೆಲಂಗಾಣ ರಾಜ್ಯದಲ್ಲಿಯೂ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಬಳಿಯೇ ಶಿಕ್ಷಣ ಖಾತೆ ಇದ್ದು, ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಇದೆ’ ಎಂದು ಮಧು ಬಂಗಾರಪ್ಪ ಸಮರ್ಥಿಸಿಕೊಂಡರು.
‘ಕೆಪಿಎಸ್ (ಕರ್ನಾ ಟಕ ಪಬ್ಲಿಕ್ ಶಾಲೆ)ಯೋಜನೆ ಕಾಂಗ್ರೆಸ್ ಸರ್ಕಾರದ ಕನಸಿನ ಕೂಸು. ಇದನ್ನು ಸ್ಥಗಿತಗೊಳಿಸಲಾಗಿದೆ ಎಂಬುದು ವದಂತಿಯಷ್ಟೇ. ಶಿವಮೊಗ್ಗದಿಂದಲೇ ಈ ಯೋಜನೆಗೆ ಮತ್ತಷ್ಟು ವೇಗ ನೀಡುವ ಕೆಲಸ ನಡೆಯಲಿದೆ. ಸರ್ಕಾರದ ಬದಲಾವಣೆಯ ಸಂದರ್ಭದಲ್ಲಿ ಉಂಟಾದ ಆಡಳಿತಾತ್ಮಕ ವ್ಯತ್ಯಾಸಗಳಿಂದ ಕೆಲವು ಕಾರ್ಯಕ್ರಮಗಳು ಮುಂದೂಡಲ್ಪಟ್ಟಿವೆ ಅಷ್ಟೇ. ಯಾವುದೇ ಯೋಜನೆಯೂ ರದ್ದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Advertisement