

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ (Gruha Lakshmi Scheme) ಯೋಜನೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಿದ ಬಳಿಕ ಸುಮಾರು 4.30 ಲಕ್ಷ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.
ಮಹಿಳಾ ಕುಟುಂಬ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹರು ಸೌಲಭ್ಯ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ "ಆಪರೇಷನ್ ಗೃಹಲಕ್ಷ್ಮಿ" ಹೆಸರಿನಲ್ಲಿ ವಿಶೇಷ ಪರಿಶೀಲನಾ ಕಾರ್ಯಾಚರಣೆ ಆರಂಭಿಸಿತ್ತು.
ಅಧಿಕೃತ ಮೂಲಗಳ ಪ್ರಕಾರ, ವಿವಿಧ ಜಿಲ್ಲೆಗಳಲ್ಲಿ ನಡೆದ ಪರಿಶೀಲನೆಯ ವೇಳೆ ಹಲವು ಅಕ್ರಮಗಳು ಪತ್ತೆಯಾಗಿವೆ. ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರ ಕುಟುಂಬಗಳು, ಮೃತ ಫಲಾನುಭವಿಗಳ ಹೆಸರಿನಲ್ಲಿ ಹಣ ಪಡೆಯಲಾಗುತ್ತಿದೆ. ಹಾಗೂ ಒಂದೇ ಕುಟುಂಬದಿಂದ ಒಂದಕ್ಕಿಂತ ಹೆಚ್ಚು ಅರ್ಜಿಗಳು ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ.
ಸತ್ತವರ ಖಾತೆಗೂ ಗೃಹಲಕ್ಷ್ಮಿ ಹಣ
ಸತ್ತವರ ಅಕೌಂಟ್ಗೆ ಹಣ ಹೋಗುತ್ತಿದೆ ಹಾಗೂ ಯೋಜನೆಯ ಹಣ ದುರ್ಬಳಕೆ ಆಗುತ್ತಿದ್ದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪರಿಷ್ಕರಣೆ ಮಾಡಲು ನಿರ್ಧರಿಸಿತ್ತು. ಅದರಂತೆ ಗ್ರಾಮ ಪಂಚಾಯಿತಿವಾರು ಆಶಾ ಕಾರ್ಯಕರ್ತೆಯರು ಮಾಹಿತಿ ಸಂಗ್ರಹಿಸಿದ್ದರು.
ಒಟ್ಟು 1.20 ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಮೃತಪಟ್ಟವರನ್ನು ಕೈಬಿಡಲಾಗಿದೆ. ಸದ್ಯ 4.30 ಲಕ್ಷ ಫಲಾನುಭವಿಗಳ ಹೆಸರನ್ನು ಡಿಲೀಟ್ ಮಾಡಲಾಗಿದ್ದು, ಈ ಮೂಲಕ ನೂರಾರು ಕೋಟಿ ರೂ. ಉಳಿತಾಯ ಆಗಲಿದೆ.
ಬೆಂಗಳೂರಿನಲ್ಲೇ 12 ಸಾವಿರ ಗೃಹಲಕ್ಷ್ಮಿಯರ ಹೆಸರು ಡಿಲೀಟ್
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಒಟ್ಟು 2,8,030 ಮಹಿಳೆಯರು ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 6,624 ಮೃತರ ಖಾತೆಗೆ ಯೋಜನೆಯ ಹಣ ಜಮೆಯಾಗಿದೆ. ಜೊತೆಗೆ ಐಟಿ-ಜಿಎಸ್ಟಿ ಪಾವತಿಸುತ್ತಿರುವ 4,800 ಫಲಾನುಭವಿಗಳು ಪತ್ತೆಯಾಗಿದ್ದಾರೆ. ಸದ್ಯ ಈ ಜಿಲ್ಲೆಯಲ್ಲಿ ಒಟ್ಟು 12,719 ಗೃಹಲಕ್ಷ್ಮಿಯರ ಹೆಸರು ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ.
ಸರ್ಕಾರವು ಡೇಟಾಬೇಸ್ಗಳನ್ನು ಪರಸ್ಪರ ಜೋಡಿಸಿ, ವಿವಿಧ ಇಲಾಖೆಗಳ ಮಾಹಿತಿಯನ್ನು ಹೋಲಿಕೆ ಮಾಡುವ ಮೂಲಕ ಈ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಪರಿಶೀಲನೆ ಮುಂದುವರಿಯಲಿದ್ದು, ಅನರ್ಹ ಫಲಾನುಭವಿಗಳನ್ನು ಗುರುತಿಸುವ ಪ್ರಕ್ರಿಯೆ ನಿರಂತರವಾಗಿರಲಿದೆ. ಇದೇ ವೇಳೆ, ಅರ್ಹರಾಗಿದ್ದರೂ ತಾಂತ್ರಿಕ ಕಾರಣಗಳಿಂದ ಹೆಸರು ಕೈಬಿಟ್ಟಿರುವವರಿದ್ದರೆ, ಅವರು ಸಂಬಂಧಿತ ಇಲಾಖೆಯನ್ನು ಸಂಪರ್ಕಿಸಿ ದಾಖಲೆಗಳೊಂದಿಗೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಗೃಹಲಕ್ಷ್ಮಿ ಯೋಜನೆ ರಾಜ್ಯದ ಅತಿದೊಡ್ಡ ನೇರ ನಗದು ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದ್ದು, ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುತ್ತಿದೆ. ಈಗಿನ ಶುದ್ಧೀಕರಣ ಕಾರ್ಯಾಚರಣೆ ಯೋಜನೆಯ ಪಾರದರ್ಶಕತೆ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.
Advertisement