

ಬೆಂಗಳೂರು: ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಜಿಲ್ಲಾಡಳಿತದೊಂದಿಗೆ ನಡೆಸುತ್ತಿರುವ ಮೊದಲ ಮಹತ್ವದ ಸಮಾಲೋಚನಾ ಸಭೆ ಜೂನ್ 13ರಂದು ವಿಧಾನಸೌಧದಲ್ಲಿ ನಡೆಯಲಿದೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (ಡಿಸಿ) ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಜೊತೆ ‘ಪರಿಶೀಲನಾ ಸಭೆ’ ನಡೆಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ.
ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸಿದ್ಧತೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನ ಹಾಗೂ ಜಿಲ್ಲಾಮಟ್ಟದಲ್ಲಿ ಆಡಳಿತಾತ್ಮಕ ಸಮನ್ವಯ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ, ಮೂಲಸೌಕರ್ಯ ಕಾಮಗಾರಿಗಳ ವೇಗ, ಅನುದಾನ ಬಳಕೆ ಹಾಗೂ ಜನಪರ ಯೋಜನೆಗಳ ಪರಿಣಾಮಕಾರಿ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಪಷ್ಟ ನಿರ್ದೇಶನ ನೀಡುವ ಸಾಧ್ಯತೆ ಇದೆ.
ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಹಿರಿಯ ಅಧಿಕಾರಿಗಳ ಭಾಗವಹಿಸಲಿದ್ದು, ಆಡಳಿತದಲ್ಲಿ ಸಮಗ್ರ ಸಮನ್ವಯಕ್ಕೆ ಒತ್ತು ನೀಡುವ ಪ್ರಯತ್ನ ನಡೆಯಲಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಆಡಳಿತಾತ್ಮಕ ಮಟ್ಟದಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಕೈಗೊಂಡಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಆಡಳಿತದ ವೇಗ ಹೆಚ್ಚಿಸಲು ಒತ್ತು ನೀಡುತ್ತಿದ್ದಾರೆ.
ಗುಪ್ತಚರ ವಿಭಾಗದ ಮುಖ್ಯಸ್ಥರ ನೇಮಕ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಲ್ಲಿ ಬದಲಾವಣೆಗಳನ್ನು ಮಾಡಿರುವ ಸರ್ಕಾರ, ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಹೊಸ ಚೈತನ್ಯ ನೀಡಲು ಮುಂದಾಗಿದೆ ಎಂದು ರಾಜಕೀಯ ವಿಶ್ಲೇಷಕ ಬಿ.ಎಸ್. ಮೂರ್ತಿ ಅವರು ಹೇಳಿದ್ದಾರೆ.
ಆಗಸ್ಟ್ನಲ್ಲಿ ನಡೆಯಲಿರುವ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆಗಳ ಹಿನ್ನೆಲೆಯಲ್ಲೂ ಈ ಸಭೆ ಮಹತ್ವ ಪಡೆದುಕೊಂಡಿದೆ.
ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಕಾರ್ಯಕ್ಷಮತೆಯಲ್ಲಿ ಶೀಘ್ರ ಫಲಿತಾಂಶ ತೋರಿಸುವ ಉದ್ದೇಶವನ್ನು ಮುಖ್ಯಮಂತ್ರಿ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಭೆಯ ಮೂಲಕ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹೊಸ ಕಾರ್ಯವಿಧಾನ (SOP) ಹಾಗೂ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ನೀಡುವ ಸಾಧ್ಯತೆ ಇದೆ.
Advertisement