

ನವದೆಹಲಿ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದ ಭದ್ರತಾ ಮೂಲಸೌಕರ್ಯ ಹಾಗೂ ಪೊಲೀಸ್ ಇಲಾಖೆಯ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಮನವಿ ಮಾಡಿದರು.
ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ರಚನಾತ್ಮಕ ಚರ್ಚೆ ನಡೆಸಿದೆ ಎಂದು ಸಿಎಂ ಶಿವಕುಮಾರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಎರಡು ಹೆಚ್ಚುವರಿ ಭಾರತೀಯ ರಿಸರ್ವ್ ಬೆಟಾಲಿಯನ್ಸ್ ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಹೆಚ್ಚಳ, ಕಾರಾಗೃಹಗಳ ಆಧುನೀಕರಣ ಸೇರಿದಂತೆ ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಅಮಿತ್ ಶಾ ಅವರಿಗೆ ಸಿಎಂ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯ ಪೊಲೀಸ್ಗೆ ʻಪ್ರೆಸಿಡೆಂಟ್ಸ್ ಕಲರ್ʼ ಪ್ರಶಸ್ತಿಯನ್ನ ನೀಡುವ ಕುರಿತಾದ ಪ್ರಸ್ತಾವನೆಯನ್ನು ಭಾರತ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಪ್ರಸ್ತುತ ಅದು ಪರಿಶೀಲನೆಯಲ್ಲಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇನ್ನು ಸಹ ಈ ಪ್ರತಿಷ್ಠಿತ ಗೌರವವನ್ನು ಸ್ವೀಕರಿಸಬೇಕಾಗಿದೆ. ಈ ವಿಷಯವನ್ನು ಶೀಘ್ರವಾಗಿ ಪರಿಶೀಲಿಸಿ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ ನೀಡಲು ಅನುಮೋದನೆ ನೀಡಬೇಕು ಎಂದು ಡಿಕೆಶಿ ಮನವಿ ಮಾಡಿದ್ದಾರೆ.
ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇನ್ನೂ ಎರಡು ಹೆಚ್ಚುವರಿ ಐಆರ್ಬಿ ಬೆಟಾಲಿಯನ್ಗಳನ್ನ ಸ್ಥಾಪಿಸಲು ಅಂದಾಜು 243.87 ಕೋಟಿ ರೂ.ಗಳ ವೆಚ್ಚದ ಹೊಸ ಪ್ರಸ್ತಾವನೆಯನ್ನ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಇದಕ್ಕೆ ಶೀಘ್ರವಾಗಿ ಮಂಜೂರಾತಿ ನೀಡಬೇಕು ಎಂದು ಕೇಳಿಕೊಂಡಿರುವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Advertisement