

ಬೆಂಗಳೂರು: ದೇಶದ ರಾಜಕೀಯ ಇತಿಹಾಸದಲ್ಲಿ ಯುಪಿಎ ಆಡಳಿತಾವಧಿಯನ್ನು ಭ್ರಷ್ಟಾಚಾರದ ಕರಾಳ ಅಧ್ಯಾಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್ಡಿಎ ಸರ್ಕಾರವು ಕಳೆದ ಒಂದು ದಶಕದಲ್ಲಿ ದೇಶವನ್ನು ಭ್ರಷ್ಟಾಚಾರ ಮುಕ್ತ ಹಾಗೂ ಜಾಗತಿಕ ಶಕ್ತಿಯನ್ನಾಗಿ ಪರಿವರ್ತಿಸಿದೆ ಎಂದು ಶ್ಲಾಘಿಸಿದ್ದಾರೆ.
ಯುಪಿಎ ಸರ್ಕಾರದ ಹತ್ತು ವರ್ಷಗಳ ಅವಧಿಯಲ್ಲಿ ದೇಶವು ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿತ್ತು. 2ಜಿ ಹಗರಣ, ಬೋಫೋರ್ಸ್, ಕಾಮನ್ವೆಲ್ತ್ ಗೇಮ್ಸ್ ಹಗರಣ ಹೀಗೆ ಒಟ್ಟು 12 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಗರಣಗಳು ನಡೆದಿದ್ದವು. ಆದರೆ, ನರೇಂದ್ರ ಮೋದಿ ಅವರ ದಶಕದ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪವೂ ಇಲ್ಲ. ಇದು ಸ್ವತಃ ಒಂದು ದೊಡ್ಡ ದಾಖಲೆಯಾಗಿದೆ.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಮುರಿದು ಸುದೀರ್ಘ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರಧಾನಿಗಳು, ಗುಜರಾತ್ ಮುಖ್ಯಮಂತ್ರಿಯಾಗಿ ಗಳಿಸಿದ್ದ ಆಡಳಿತಾತ್ಮಕ ಅನುಭವವನ್ನು ರಾಷ್ಟ್ರ ಮಟ್ಟದಲ್ಲಿ ಸಮರ್ಥವಾಗಿ ಬಳಸುತ್ತಿದ್ದಾರೆ ಎಂದು ತಿಳಿಸಿದರು.
2014ರಲ್ಲಿ ಮೋದಿಯವರು ದೇಶದ ಸವಾಲನ್ನು ಸ್ವೀಕರಿಸಿದಾಗ, ಭಾರತಕ್ಕೆ ಉಜ್ವಲ ಭವಿಷ್ಯವಿದೆ ಎಂಬುದನ್ನು ಸಾಬೀತುಪಡಿಸುವುದಾಗಿ ಭರವಸೆ ನೀಡಿದ್ದರು. ಇಂದು ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಕಳೆದ ಹನ್ನೆರಡು ವರ್ಷಗಳಲ್ಲಿ ಕೈಗೊಂಡ ಆಮೂಲಾಗ್ರ ಬದಲಾವಣೆಗಳ ಫಲವಾಗಿ ಮೂಲಸೌಕರ್ಯ ಕ್ಷೇತ್ರಕ್ಕೆ 12 ಲಕ್ಷ ಕೋಟಿ ರೂಪಾಯಿಗೂ ಅಧಿಕ ಹೂಡಿಕೆ ಹರಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿಗಳ ಜಾಲ, ಮೆಟ್ರೋ ರೈಲುಗಳ ವಿಸ್ತರಣೆ ಮತ್ತು ಅತ್ಯಾಧುನಿಕ ವಿಮಾನ ನಿಲ್ದಾಣಗಳ ನಿರ್ಮಾಣ. ಎಲ್ಪಿಜಿ ಸಂಪರ್ಕ ಶೇ. 100 ತಲುಪಿದೆ, ಸೋಲಾರ್ ಮತ್ತು ನವೀಕರಿಸಬಹುದಾದ ಇಂಧನ ಸಾಮರ್ಥ್ಯದಲ್ಲಿ ಭಾರತ ಜಾಗತಿಕ ಮನ್ನಣೆ ಗಳಿಸಿದೆ. ರಕ್ಷಣಾ ಕ್ಷೇತ್ರದಲ್ಲಿ ಹಿಂದೆ ಆಮದು ಮಾಡಿಕೊಳ್ಳುತ್ತಿದ್ದ ಭಾರತ, ಇಂದು ಉಪಕರಣಗಳನ್ನು ಉತ್ಪಾದಿಸುವ ಮಟ್ಟಕ್ಕೆ ಬೆಳೆದಿದೆ.
ಬಜೆಟ್ ಹಂಚಿಕೆಯಲ್ಲಿ ಶೇ. 165ರಷ್ಟು ಏರಿಕೆ ಮಾಡಲಾಗಿದೆ ಎಂದು ಹೇಳಿದರು.ಮೋದಿಯವರ ಆಡಳಿತದಲ್ಲಿ ಜಾತಿ-ಧರ್ಮದ ಭೇದವಿಲ್ಲದೆ, ದೇಶದ ಪ್ರತಿಯೊಬ್ಬ ನಾಗರಿಕನ ಕಲ್ಯಾಣಕ್ಕೆ ಒತ್ತು ನೀಡಲಾಗಿದೆ. ದೇಶದಲ್ಲಿ ಇರುವುದು ನಾಲ್ಕು ಜಾತಿ ಮಾತ್ರ. ಬಡವರು, ರೈತರು, ಮಹಿಳೆಯರು ಮತ್ತು ಯುವಕರು. ಈ ನಾಲ್ಕು ವರ್ಗಗಳ ಸಬಲೀಕರಣವೇ ಮೋದಿಯವರ ಸರ್ಕಾರದ ಗುರಿಯಾಗಿದೆ. ಹಿಂದಿನ ಸರ್ಕಾರಗಳು ನಿರ್ಲಕ್ಷಿಸಿದ್ದ ಈಶಾನ್ಯ ಭಾರತ ಇಂದು ದೇಶದ ಮುಖ್ಯವಾಹಿನಿಗೆ ಸೇರಿದೆ ಎಂದಿದ್ದಾರೆ.
Advertisement