ಯಾವುದೇ ನಾಗರಿಕರು ಮತದಾನದ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಸಚಿವರು, DCಗಳಿಗೆ CM ಡಿಕೆಶಿ ಖಡಕ್ ಸೂಚನೆ

ಮತದಾರರು ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕಾದರೆ ಬೂತ್ ಮಟ್ಟದ ಅಧಿಕಾರಿಗಳು (BLO) ನೀಡುವ ನಮೂನೆಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು. BLOಗಳು ಮನೆಮನೆಗೆ ಮೂರು ಬಾರಿ ಭೇಟಿ ನೀಡಲಿದ್ದಾರೆ.
CM DK Shivakumar
ಡಿಕೆ.ಶಿವಕುಮಾರ್
Updated on

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ಯಾವುದೇ ನಾಗರಿಕರ ಮತದಾನದ ಹಕ್ಕು ಕಳೆದುಹೋಗದಂತೆ ನೋಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶನಿವಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್‌ಪಿಗಳು, ಅರಣ್ಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 20ರಿಂದ ರಾಜ್ಯದಲ್ಲಿ ಆರಂಭವಾಗಲಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಪ್ರತಿಯೊಬ್ಬ ಅರ್ಹ ಮತದಾರರ ಹೆಸರೂ ಉಳಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

"ಮತದಾರರು ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕಾದರೆ ಬೂತ್ ಮಟ್ಟದ ಅಧಿಕಾರಿಗಳು (BLO) ನೀಡುವ ನಮೂನೆಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು. BLOಗಳು ಮನೆಮನೆಗೆ ಮೂರು ಬಾರಿ ಭೇಟಿ ನೀಡಲಿದ್ದಾರೆ.

ಮನೆಯವರು ಸಿಗದಿದ್ದರೆ ಅಥವಾ ಮನೆ ಬೀಗ ಹಾಕಿದ್ದರೆ ಅದರ ಬಗ್ಗೆ ವರದಿ ಸಲ್ಲಿಸಲಾಗುತ್ತದೆ. ಹೊರ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವವರ ದಾಖಲೆಗಳು ಹಾಗೂ ಸಹಿಗಳನ್ನು ಸಂಗ್ರಹಿಸಿ ಸಲ್ಲಿಸಬೇಕು ಎಂದು ತಿಳಿಸಿದರು.

ವಾಸಸ್ಥಳ ಪ್ರಮಾಣಪತ್ರ ಕಡ್ಡಾಯ

ಮತದಾರರ ಹಕ್ಕು ಕಳೆದುಕೊಳ್ಳದಂತೆ ಪ್ರತಿಯೊಬ್ಬರಿಗೂ ವಾಸಸ್ಥಳ ಪ್ರಮಾಣಪತ್ರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಿಎಂ ಹೇಳಿದರು.

"ಭವಿಷ್ಯದಲ್ಲಿ ಮತದಾನದ ಹಕ್ಕು ಇಲ್ಲದಿದ್ದರೆ ಕುಟುಂಬದ ಮುಖ್ಯಸ್ಥರಿಗೆ ಗ್ಯಾರಂಟಿ ಯೋಜನೆಗಳು, ಪಿಂಚಣಿ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿ ಸಮಸ್ಯೆಗಳು ಎದುರಾಗಬಹುದು. ಆದ್ದರಿಂದ ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಎಚ್ಚರಿಸಿದರು.

CM DK Shivakumar
ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ: ಗದಗ ಅಭಿಮಾನಿಯಿಂದ ಗ್ರಾಮಸ್ಥರಿಗೆ ಭರ್ಜರಿ ಬಾಡೂಟ!

ಗ್ರಾಮೀಣ ಶಾಲೆಗಳಿಗೆ CSR ಆದ್ಯತೆ

ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಯೋಜನೆಗಳಡಿ ಗ್ರಾಮೀಣ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.

"ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಇದಕ್ಕಾಗಿ ವಿಶೇಷ ವಿನ್ಯಾಸ ರೂಪಿಸಿದ್ದೇವೆ. ಮುಂದಿನ ದಿನಗಳಲ್ಲಿ ಕಾರ್ಪೊರೇಟ್ ಸಂಸ್ಥೆಗಳು ಪ್ರತ್ಯೇಕ ಶಾಲೆಗಳನ್ನು ದತ್ತು ಪಡೆಯುವ ವ್ಯವಸ್ಥೆ ಜಾರಿಗೆ ತರಲಾಗುತ್ತದೆ," ಎಂದರು.

ಖಾಸಗಿ ಉದ್ಯೋಗ ವಿನಿಮಯ ಕೇಂದ್ರ

ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಬಯಸುವವರಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಖಾಸಗಿ ಉದ್ಯೋಗ ವಿನಿಮಯ ಕೇಂದ್ರ (Private Employment Exchange) ಸ್ಥಾಪಿಸುವುದಾಗಿ ಸಿಎಂ ಘೋಷಿಸಿದರು.

"ರಾಜ್ಯದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ದೊರೆಯಬೇಕು. ಕಂಪನಿಗಳೊಂದಿಗೆ ಚರ್ಚಿಸಿ ಸ್ಥಳೀಯರಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಉದ್ಯೋಗ ನೀಡುವ ವ್ಯವಸ್ಥೆ ಮಾಡಲಾಗುವುದು. ತಾಂತ್ರಿಕ ಹುದ್ದೆಗಳಿಗೆ ಹೊರ ರಾಜ್ಯದವರ ಅಗತ್ಯವಿದ್ದರೂ, ಉಳಿದ ಹುದ್ದೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಎಲ್ಲಾ ತಾಲೂಕು ಕೇಂದ್ರಗಳಿಗೆ ರಿಂಗ್‌ರೋಡ್

ಇದೇ ವೇಳೆ ರಾಜ್ಯದ ಪ್ರತಿಯೊಂದು ತಾಲೂಕು ಹಾಗೂ ಜಿಲ್ಲಾ ಕೇಂದ್ರಕ್ಕೂ ರಿಂಗ್‌ರೋಡ್ ನಿರ್ಮಾಣದ ಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಿಎಂ ತಿಳಿಸಿದರು.

"ಒಂದೇ ವರ್ಷದಲ್ಲಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೂ, ರಿಂಗ್‌ರೋಡ್‌ಗೆ ಅಗತ್ಯ ಭೂ ಗುರುತಿಸುವಿಕೆ ಹಾಗೂ ಮೂಲ ಯೋಜನೆ ಸಿದ್ಧವಾಗಬೇಕು. ಪ್ರತಿಯೊಂದು ತಾಲೂಕು ಮತ್ತು ಜಿಲ್ಲಾ ಕೇಂದ್ರಕ್ಕೂ ರಿಂಗ್‌ರೋಡ್ ಕಡ್ಡಾಯ ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com