

ಬೆಂಗಳೂರು: ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಡಿಕೆಶಿ ಅಧಿಕಾರಿಗಳಿಗೆ ಹಲವು ಸೂಚನೆ, ನಿರ್ದೇಶನಗಳನ್ನು ನೀಡಿದರು.
ಬರ ಪರಿಸ್ಥಿತಿ ಎದುರಿಸಲು ತುರ್ತು ಕ್ರಮಗಳ ಪೂರ್ವಸಿದ್ಧತೆಗೆ ನಿರ್ದೇಶಿಸಿದರು. ರೈತರಿಗೆ ಅಗತ್ಯ ಮಾಹಿತಿ ಪೂರೈಸಿ. ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಸನ್ನದ್ಧರಾಗುವಂತೆ ಸೂಚಿಸಿದರು.
ಕ್ರಿಮಿನಾಶಕ ಮತ್ತಿತರ ಔಷಧ ಸಿಂಪರಣೆ ಸಲಕರಣೆಗಳ ನೆರವನ್ನು ರೈತರಿಗೆ ಒದಗಿಸಿ. ಕೃಷಿ ಹೊಂಡಗಳಿಗೆ ಬಿದ್ದು ಸಾವನ್ನಪ್ಪುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಂಡಗಳಿಗೆ ಬೇಲಿ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಿ. ಇದಕ್ಕೆ ಹಣಕಾಸಿನ ನೆರವು ಸಂಬಂಧ ಅಗತ್ಯ ಯೋಜನೆ ರೂಪಿಸಿ, ಚರ್ಚಿಸಿ. ಇತರೆ ರಾಜ್ಯಗಳಲ್ಲಿರುವ ಮಾದರಿ ಯೋಜನೆ, ಮಾರ್ಗಗಳನ್ನು ಅಧ್ಯಯನ ಮಾಡಿ ರಾಜ್ಯದ ಕೃಷಿ ಸಂಸ್ಕೃತಿ ಮತ್ತು ಬೆಳೆ ಮಾದರಿಗಳಿಗೆ ಅನುಗುಣವಾಗಿ ಕಾರ್ಯರೂಪಕ್ಕೆ ತನ್ನಿ ಎಂದು ತಿಳಿಸಿದರು.
ದ್ರೋಣ್, AI ಮತ್ತಿತರ ಆಧುನಿಕ ತಂತ್ರಜ್ಞಾನವನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಿ. ಪ್ರಕೃತಿ ವೈಪರೀತ್ಯಗಳಿಂದ ರೈತರ ಕೃಷಿ ಚಟುವಟಿಕೆಗೆ ತೊಂದರೆ ಆಗದಂತೆ ಕ್ರಮ ವಹಿಸಿ. ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಿ. ಪ್ರಾಥಮಿಕ ಕೃಷಿ ಜತೆ ಸೆಕೆಂಡರಿ ಕೃಷಿ ಸೇರಿದಂತೆ ರೈತರ ಆದಾಯ ಹೆಚ್ಚಿಸಲು ಈಗಾಗಲೇ ಸೂಚಿಸಿರುವ ಕ್ರಮಗಳನ್ನು ಸಮರ್ಪಕವಾಗಿ ಜಾರಿ ಮಾಡಿ ಎಂದು ಸೂಚಿಸಿದರು.
ಸಬ್ಸಿಡಿ ನೀಡಿರುವ ಉದ್ದೇಶ ಜಾರಿ ಆಗುತ್ತಿದೆಯೇ ಎಂಬ ಬಗ್ಗೆ ವರದಿ ಕೊಡಿ: ಕೃಷಿ ಇಲಾಖೆ ಅಧೀನದಲ್ಲಿರುವ ಐದು ನಿಗಮ ಮತ್ತು ಮಂಡಳಿಗಳ ಸ್ಥಿತಿಗತಿಯ ಅಧ್ಯಯನ ನಡೆಸಿ ವರದಿ ನೀಡಿ. ರೈತರಿಗೆ ನೀಡಬೇಕಾದ ಪೂರಕ ಮಾಹಿತಿಗಳನ್ನು ವರದಿಯಲ್ಲಿ ಉಲ್ಲೇಖಿಸಿ. ರಾಜ್ಯದಲ್ಲಿರುವ ಕೋಲ್ಡ್ ಸ್ಟೋರೇಜ್ ಮತ್ತು ಗೋದಾಮುಗಳು ಬಗ್ಗೆ ಪಟ್ಟಿ ಕೊಡಿ. ರೈತರಿಗೆ ಸಬ್ಸಿಡಿ ದರದಲ್ಲಿ ಕೊಟ್ಟಿರುವ ಸವಲತ್ತುಗಳು ಎಷ್ಟು ಪ್ರಯೋಜನಕಾರಿಯಾಗಿವೆ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ. ಸಬ್ಸಿಡಿ ನೀಡಿರುವ ಉದ್ದೇಶ ಜಾರಿ ಆಗುತ್ತಿದೆಯೇ ಎಂಬುದರ ಬಗ್ಗೆ ವರದಿ ನೀಡಿ ಎಂದು ಸೂಚಿಸಿದರು.
ಕೆಪೆಕ್ ಮೂಲಕ ರಫ್ತು ಎಷ್ಟು ಹೆಚ್ಚಾಗಿದೆ. ರಫ್ತು ಉತ್ತೇಜಿಸಲು ಏನೇನು ಕ್ರಮ ತೆಗೆದುಕೊಂಡಿದ್ದೀರಿ?. ರಫ್ತು ಉತ್ತೇಜನಕ್ಕೆ ಯೋಜನೆ ರೂಪಿಸಲು ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್ ಹಾಗೂ ಎಸಿಎಸ್ ತುಷಾರ ಗಿರಿನಾಥ್ ಅವರಿಗೆ ಸೂಚಿಸಿದರು. ಕೇಂದ್ರ ಸರ್ಕಾರ ಪ್ರಾಯೋಜಿತ
ಯೋಜನೆಗಳು ಎಷ್ಟರ ಮಟ್ಟಿಗೆ ಜಾರಿ ಆಗುತ್ತಿದೆ ಎನ್ನುವ ಬಗ್ಗೆ ವರದಿ ನೀಡಿ. ಕೇಂದ್ರದ ಸಹಕಾರ, ಅನುದಾನಕ್ಕೆ ಬರುವಂತೆ ಒತ್ತಡ ಹೇರೋಣ. ಸಹಕಾರ ಮತ್ತು ಕೃಷಿ ಮಾರುಕಟ್ಟೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸೇರಿದ ಜಾಗಗಳು ಸುರಕ್ಷಿತವಾಗಿರಬೇಕು.
ಕಾಂಪೌಂಡ್ ಹಾಕಿಸಿ ಈ ಬಗ್ಗೆ ಕ್ರಮ ಕೈಗೊಳ್ಳಿ. APMC ಗಳು ಸರಿಯಾಗಿ ರೈತರಿಗೆ ಬಳಕೆ ಆಗುತ್ತಿವೆಯೇ ಎನ್ನುವ ಬಗ್ಗೆ ಖಚಿತಪಡಿಸಿಕೊಳ್ಳಿ ಎಂದು ಸೂಚನೆ ನೀಡಿದರು.
Advertisement