

ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆ ಕೇಂದ್ರ ಸಚಿವ ಕುಮಾರಸ್ವಾಮಿಯವರ ಕೂಸು. ಇದು ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಬಹುತೇಕರು ಹಸಿರು ಶಾಲು ಹೊದ್ದುಕೊಂಡಿರುವ ಜೆಡಿಎಸ್ ಕಾರ್ಯಕರ್ತರಾಗಿದ್ದಾರೆ ಎಂದಿದ್ದಾರೆ. ಈ ಯೋಜನೆಯಿಂದ ಮುಂದೆ ಜನರಿಗೆ ಅನ್ಯಾಯವಾಗುತ್ತದೆ ಎಂದು ಅನಿಸಿದರೆ ಅದಕ್ಕೆ ದಾಖಲೆ ಬಿಡುಗಡೆ ಮಾಡಲಿ. ಯೋಜನೆಯಲ್ಲಿ ಲೂಟಿ ಮಾಡಲು ಅವಕಾಶ ಎಲ್ಲಿದೆ ಎಂಬುದನ್ನು ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.
ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಡದಿಯಲ್ಲಿ 9,484 ಎಕರೆಯಲ್ಲಿ ಟೌನ್ ಶಿಪ್ ಮಾಡಲು ತೀರ್ಮಾನಿಸಲಾಗಿತ್ತು. 7,481 ಎಕರೆ ಜಮೀನು ಸ್ವಾಧೀನಕ್ಕೆ ನಮ್ಮ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜಮೀನು ಸ್ವಾಧೀನಪಡಿಸಿಕೊಂಡು ನಿವೇಶನ ಮಾಡಿ ಬೇರೆಯವರಿಗೆ ಹಂಚುವ ಉದ್ದೇಶವಿಲ್ಲ. ಕೈಗಾರಿಕಾ ಕಾರಿಡಾರ್ ಮಾಡುವ 7,481 ಎಕರೆ ಜತೆಗೆ ರೆಸಿಡೆನ್ಸಿಯಲ್ ಕಾರಿಡಾರ್ ನಿರ್ಮಿಸಲಾಗುತ್ತಿದೆ. ಭೂಮಿಯನ್ನು ವಶಪಡಿಸಿಕೊಂಡು ನೀಡುವುದಷ್ಟೇ ನಮ್ಮ ಕೆಲಸ. ಟೌನ್ ಶಿಪ್ ಅನ್ನು ಜನರೇ ನಿರ್ಮಾಣ ಮಾಡಿಕೊಳ್ಳುತ್ತಾರೆ ಎಂದರು.
ಪ್ರತಿಭಟನೆ ಮಾಡುತ್ತಿರುವವರಲ್ಲಿ ರೈತರು ಎಲ್ಲಿದ್ದಾರೆ ತೋರಿಸಿ, ಹಸಿರು ಶಾಲು ಹಾಕಿಕೊಂಡು ಬಂದಿರುವ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
Advertisement