

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಅಚಲು ಗ್ರಾಮದಲ್ಲಿ ಬುಧವಾರ 34 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದಿದ್ದು, ಈ ವೇಳೆ ಆತನನ್ನು ಗ್ರಾಮಸ್ಥರು ತಡೆದಾಗ ತಾನೇ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಂಜಯ್(34) ಎಂದು ಗುರುತಿಸಲಾಗಿದ್ದು, ಆತನ ಪತ್ನಿ ನಿಸರ್ಗ(24) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಪೊಲೀಸರ ಪ್ರಕಾರ, ಈ ದಂಪತಿಗಳು ಕೆಲವು ದಿನಗಳಿಂದ ಆಗಾಗ್ಗೆ ಜಗಳ ಮಾಡುತ್ತಿದ್ದರು. ಬುಧವಾರ, ಸಂಜಯ್ ಗ್ರಾಮದ ಸೈಬರ್ ಕೇಂದ್ರದ ಬಳಿ ಪತ್ನಿ ನಿಸರ್ಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ.
ಆಕೆಯ ಕಿರುಚಾಟ ಕೇಳಿ ತಕ್ಷಣ ನೆರವಿಗೆ ಧಾವಿಸಿದ ಗ್ರಾಮಸ್ಥರು, ನಿಸರ್ಗಳನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆ ಸಂಜಯ್ ಪರಾರಿಯಾಗಲು ಯತ್ನಿಸಿದರು. ಆದರೆ ಗ್ರಾಮಸ್ಥರು ಬೆನ್ನಟ್ಟಿ ಆತನನ್ನು ಹಿಡಿದು, ಕನಕಪುರ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿದರು.
ಪೊಲೀಸರು ಬರುವ ಮೊದಲು ಸಂಜಯ್ ತಪ್ಪಿಸಿಕೊಳ್ಳುವುದನ್ನು ತಡೆಯಲು ಗ್ರಾಮಸ್ಥರು ಆತನನ್ನು ಕೋಣೆಯೊಳಗೆ ಲಾಕ್ ಮಾಡಿದ್ದಾರೆ. ಈ ವೇಳೆ ಪತ್ನಿ ಮೇಲೆ ದಾಳಿಗೆ ಬಳಸಿದ್ದ ಚಾಕುವಿನಿಂದ ತನ್ನ ಎದೆ ಮತ್ತು ಹೊಟ್ಟೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಪೊಲೀಸರು ಬಂದು ಕೊಠಡಿ ತೆರೆದಾಗ, ಸಂಜಯ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಅತಿಯಾದ ರಕ್ತ ಶ್ರಾವದಿಂದ ಸಂಜಯ್ ಸಾವನ್ನಪ್ಪಿದ್ದಾರೆ.
ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Advertisement