

ಬೆಳಗಾವಿ: ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಂಗ್ರಹದ ಮೇಲೆ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೃಷ್ಣಾ ನದಿಗೆ 2 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಶನಿವಾರ ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಲಿದ್ದಾರೆ.
ಈ ಸಭೆಯಿಂದ ಸಕಾರಾತ್ಮಕ ಫಲಿತಾಂಶ ಹೊರಬರಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಬೇಸಿಗೆ ತಿಂಗಳುಗಳಲ್ಲಿ 2 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡುವ ಹಿಂದಿನ ಪದ್ಧತಿಯನ್ನು ಮಹಾರಾಷ್ಟ್ರ ಸರ್ಕಾರ ಪುನರಾರಂಭಿಸಲಿದೆ ಎಂದು ರಾಜ್ಯ ಸರ್ಕಾರ ನಿರೀಕ್ಷಿಸುತ್ತಿದೆ ಎಂದು ತಿಳಿಸಿದ್ದಾರೆ. ಕಳೆದ ಐದರಿಂದ ಆರು ವರ್ಷಗಳಿಂದ ಈ ನೀರು ಬಿಡುಗಡೆ ಆಗಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಗಳು ಸ್ವತಃ ಮಹಾರಾಷ್ಟ್ರ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿ ನೀರು ಬಿಡುಗಡೆ ಮಾಡುವ ಅಗತ್ಯವನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಬಳಸುವ 2 ಟಿಎಂಸಿ ಅಡಿ ನೀರು ನಮಗೆ ದೊರೆಯಲಿದೆ ಎಂಬ ವಿಶ್ವಾಸವಿದೆ ಎಂದು ರೋಷನ್ ಹೇಳಿದರು.
ಹಿಪ್ಪರಗಿ ಬ್ಯಾರೇಜ್ನ ಗೇಟ್ ದೋಷದಿಂದ ಸುಮಾರು 1.5 ಟಿಎಂಸಿ ಅಡಿ ಸಂಗ್ರಹಿತ ನೀರು ಹರಿದುಹೋಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಇದರಿಂದ ಜಲಾಶಯದಲ್ಲಿ ಕೇವಲ 0.08 ಟಿಎಂಸಿ ಅಡಿ ನೀರು ಮಾತ್ರ ಉಳಿದಿದೆ. ಈ ವಿಷಯವನ್ನು ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಅವರು ನೇರವಾಗಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಈ ಬಗ್ಗೆ ಚರ್ಚಿಸಿದ್ದಾರೆ.
ಆದಾಗ್ಯೂ, ತಕ್ಷಣದ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇಲ್ಲ ಎಂದು ರೋಷನ್ ಸ್ಪಷ್ಟಪಡಿಸಿದರು. ಪ್ರಸ್ತುತ ಹಿಡಕಲ್ ಜಲಾಶಯದಲ್ಲಿ 5.5 ಟಿಎಂಸಿ ಅಡಿ ನೀರು ಹಾಗೂ ಮಲಪ್ರಭಾ ಜಲಾಶಯದಲ್ಲಿ 8 ಟಿಎಂಸಿ ಅಡಿ ನೀರು ಲಭ್ಯವಿದ್ದು, ಅದರಲ್ಲಿ ಸುಮಾರು 5 ಟಿಎಂಸಿ ಅಡಿ ನೀರನ್ನು ಬಳಸಬಹುದಾಗಿದೆ ಎಂದು ತಿಳಿಸಿದರು.
ಲಭ್ಯವಿರುವ ನೀರಿನ ಸಂಗ್ರಹವನ್ನು ಸಂಪೂರ್ಣವಾಗಿ ಕುಡಿಯುವ ನೀರಿನ ಉದ್ದೇಶಕ್ಕೆ ಮೀಸಲಿಡಲಾಗಿದ್ದು, ಸದ್ಯಕ್ಕೆ ನೀರಾವರಿಗೆ ಯಾವುದೇ ನೀರು ಪೂರೈಸಲಾಗುವುದಿಲ್ಲ ಎಂದು ಹೇಳಿದರು.
ಜಾನುವಾರುಗಳಿಗೆ ಸಮರ್ಪಕವಾಗಿ ನೀರು ದೊರೆಯುವಂತೆ ಸ್ಥಳೀಯ ಸಂಸ್ಥೆಗಳಿಗೆ ನಿರಂತರ ಮೇಲ್ವಿಚಾರಣೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
Advertisement