

ಉತ್ತರ ಕನ್ನಡ: ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಭಟ್ಕಳ ಪಟ್ಟಣದಿಂದ ಸಾಗರ ರಸ್ತೆಯ ಕಡೆಗೆ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಯುವಕನ ವಿರುದ್ಧ ಅಪಹರಣ ಹಾಗೂ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ.
ಬುಧವಾರ ರಾತ್ರಿ ಭಟ್ಕಳದ ಸಾಗರ-ಭಟ್ಕಳ ರಸ್ತೆಯಲ್ಲಿ ಕಾರು ಕೆಟ್ಟು ನಿಂತಿದ್ದ ವೇಳೆ, ಸೂಪರ್ಮಾರ್ಕೆಟ್ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದ ಹಿಂದೂ ಮಹಿಳೆ ಮತ್ತು ಶಾಹಿದ್ ಎಂಬ ಮುಸ್ಲಿಂ ಯುವಕನನ್ನು ಕೆಲ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಪ್ರಶ್ನಿಸಿದ್ದರು. ಈ ವೇಳೆ ಮಹಿಳೆ ತನ್ನನ್ನು ಬಲವಂತವಾಗಿ ಅಲ್ಲಿಗೆ ಕರೆತಂದಿರುವುದಾಗಿ ಹೇಳಿದ್ದಾಳೆ ಎನ್ನಲಾಗಿದೆ.
ಬಳಿಕ ಇಬ್ಬರನ್ನೂ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಶಾಹಿದ್, ತನ್ನ ಮೇಲೆ ಕೆಲ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಾಗಿತ್ತು.
ಆದರೆ, ಈ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶಾಹಿದ್ ವಿರುದ್ಧ ಅಪಹರಣ ಮತ್ತು ಲೈಂಗಿಕ ಕಿರುಕುಳ ಆರೋಪದಡಿ ಎಫ್ಐಆರ್ ದಾಖಲಿಸಿದ್ದಾರೆ.
ತನ್ನ ಇಚ್ಛೆಗೆ ವಿರುದ್ಧವಾಗಿ ಕರೆದುಕೊಂಡು ಹೋಗಿ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ ಎಂದು ತಿಳಿದುಬಂದಿದೆ.
ಈ ಬೆಳವಣಿಗೆಯಿಂದ ಭಟ್ಕಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಮಹಿಳೆಯ ದೂರನ್ನು ಆರಂಭದಲ್ಲಿ ದಾಖಲಿಸದ ಪೊಲೀಸರು, ಯುವಕನ ದೂರಿನ ಮೇರೆಗೆ ಮಾತ್ರ ಕ್ರಮ ಕೈಗೊಂಡಿದ್ದರು ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, "ಘಟನೆ ಸಂಬಂಧ ಮಹಿಳೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ" ಎಂದು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಶಾಹಿದ್ ಮಹಿಳೆಯೊಂದಿಗೆ ವೈಯಕ್ತಿಕ ಸಂಬಂಧ ಬೆಳೆಸಲು ಪ್ರಯತ್ನಿಸುತ್ತಿದ್ದ ಎನ್ನಲಾಗಿದ್ದು, ಘಟನೆ ನಡೆದ ದಿನ ಆಕೆಯನ್ನು ತನ್ನೊಂದಿಗೆ ಬರುವಂತೆ ಹೇಳಿ ಸಾಗರ-ಭಟ್ಕಳ ರಸ್ತೆಯತ್ತ ಕರೆದುಕೊಂಡು ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಸತ್ಯಾಂಶಗಳು ತನಿಖೆಯ ಬಳಿಕವೇ ಹೊರಬೀಳಲಿವೆ.
Advertisement