

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಬಾಕಿ ದಂಡಗಳನ್ನು ಪಾವತಿಸಲು ರಾಜ್ಯ ಸರ್ಕಾರ ನೀಡಿರುವ ಶೇ.50ರಷ್ಟು ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.
ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ನಾಗರಿಕರೊಬ್ಬರು ತಮ್ಮ ವಾಹನದ ಮೇಲೆ ದಾಖಲಾಗಿದ್ದ 100 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ ಸೌಲಭ್ಯ ಪಡೆದು ರೂ.27,500 ದಂಡವನ್ನು ಪಾವತಿಸಿದ್ದಾರೆ.
ಜೂನ್ 21ರಿಂದ ಜುಲೈ 10ರವರೆಗೆ ಬಾಕಿ ಸಂಚಾರ ದಂಡಗಳ ಮೇಲೆ ಶೇ.50 ರಿಯಾಯಿತಿ ನೀಡಲಾಗುತ್ತಿದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸಂಚಾರ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ದಂಡ ಪಾವತಿಸಿದ ವಾಹನ ಸವಾರರು, ಇನ್ನು ಮುಂದೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದಾಗಿ ಹಾಗೂ ಸುರಕ್ಷಿತ ವಾಹನ ಚಾಲನೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.
ಸಂಚಾರ ಪೊಲೀಸರು ಕೂಡ ಈ ರಿಯಾಯಿತಿ ಅವಧಿಯನ್ನು ಸದುಪಯೋಗಪಡಿಸಿಕೊಂಡು ಬಾಕಿ ಇರುವ ದಂಡಗಳನ್ನು ಪಾವತಿಸುವಂತೆ ವಾಹನ ಸವಾರರಿಗೆ ಸಲಹೆ ನೀಡಿದ್ದಾರೆ.
ಸಂಚಾರ ನಿಯಮಗಳ ಪಾಲನೆಯಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ನಿರ್ಮಿಸಲು ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement