

ವಿಜಯಪುರ: ಭೀಮಾತೀರದಲ್ಲಿ 6 ಮಂದಿ ಹತ್ಯೆ ಪ್ರಕರಣದ ಕಿಂಗ್ಪಿನ್ ಪರಾರಿಯಾಗಲು ಯತ್ನಿಸಿದ್ದು ಪೊಲೀಸರು ಆರೋಪಿಯ ಕಾಲಿಗೆ ಗುಂಡಿಕ್ಕಿದ್ದಾರೆ. ಪೊಲೀಸ್ ತಂಡದ ಮೇಲೆ ಕಲ್ಲು ತೂರಾಟ ಮತ್ತು ಅಧಿಕಾರಿಗಳಿಗೆ ಚಾಕುವಿನಿಂದ ಬೆದರಿಕೆ ಹಾಕಿ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ ಮಹೇಶ್ ತಳವಾರ್ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.
ಮೇ 29 ರಂದು ಭೂ ವಿವಾದಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯ ಗೋವಿಂದಪುರ ಗ್ರಾಮದಲ್ಲಿ ಆರು ಜನರನ್ನು ಹತ್ಯೆ ಮಾಡಲಾಗಿತ್ತು. ಇದೀಗ ಪ್ರಕರಣದ ಕಿಂಗ್ಪಿನ್ ಮೇಲೆ ಗುಂಡು ಹಾರಿಸಲಾಗಿದೆ. ಸದ್ಯ ಆರೋಪಿಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಡಚಣ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಇದುವರೆಗೆ 38 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ವಿಜಯಪುರ ಗ್ರಾಮೀಣ ಪೊಲೀಸ್ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಬಳಿ ಮಹೇಶ್ ತಲ್ವಾರ್ ಅಡಗಿಕೊಂಡಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿತು. ಪೊಲೀಸ್ ತಂಡ ಆರೋಪಿಯನ್ನು ಬಂಧಿಸಲು ಹೋಗಿದ್ದಾಗ ಅಧಿಕಾರಿಗಳನ್ನು ನೋಡಿ ಓಡಿಹೋಗಲು ಪ್ರಯತ್ನಿಸಿದನು. ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಲಾಗಿತ್ತು. ಇದರ ಹೊರತಾಗಿಯೂ, ಆರೋಪಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರಿಂದ ಬಲಗಾಲಿಗೆ ಗುಂಡು ಹಾರಿಸಲಾಯಿತು. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ ಎಂದು ಲಕ್ಷ್ಮಣ್ ನಿಂಬರಗಿ ತಿಳಿಸಿದರು.
ಚಂದ್ರಕಾಂತ್ ನಿರಾಲೆ, ಅವರ ಪುತ್ರರಾದ ಸಮರ್ಥ್ ಮತ್ತು ರಾಹುಲ್ ದುಂಡಪ್ಪ ನಿರಾಲೆ, ಶಿವಪುತ್ರ ನಿರಾಲೆ ಮತ್ತು ಶಬ್ಬೀರ್ ಅತ್ತರ್ ಬಿಕಾರ್ ಎಂಬುವರನ್ನು ಕೊಲೆ ಮಾಡಲಾಗಿತ್ತು.
Advertisement