

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ಬಂಧಿಸಲ್ಪಟ್ಟಿರುವ ಶಂಕಿತ ಉಗ್ರ ಸುಹೇಲ್ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಶುಕ್ರವಾರ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು.
ಈ ವೇಳೆ ಸಾಮಾಜಿಕ ಜಾಲತಾಣಗಳಲ್ಲಿನ ಚಟುವಟಿಕೆಗಳು, ವಿವಿಧ ಆನ್ಲೈನ್ ಖಾತೆಗಳು ಹಾಗೂ ಇತರ ಸಂಪರ್ಕಗಳ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆಂದು ತಿಳಿದುಬಂದಿದೆ.
ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದ ಗುಟ್ಟಿಯಪ್ಪ ಎಂಬುವವರ ಮನೆಯಿಂದ ಸುಹೇಲ್ನನ್ನು ಬಂಧಿಸಲಾಗಿತ್ತು. ಖಾಸಗಿ ಕಾರ್ಖಾನೆಯೊಂದರಲ್ಲಿ ಪೇಂಟಿಂಗ್ ಕೆಲಸಕ್ಕಾಗಿ ಬಂದಿದ್ದ 10 ಮಂದಿಯ ತಂಡದಲ್ಲಿ ಆತನೇ ಪ್ರಮುಖವಾಗಿ ಸಕ್ರಿಯನಾಗಿದ್ದ ವ್ಯಕ್ತಿ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
ಈ ಕುರಿತು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ಶೇಖರ್ ಎಚ್.ಟಿ. ಮಾಹಿತಿ ನೀಡಿದ್ದು, ಎನ್ಐಎ ಅಧಿಕಾರಿಗಳು ಆರೋಪಿಯನ್ನು ಸುಮಾರು ಒಂದು ಗಂಟೆ ವಿಚಾರಣೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ವಿಚಾರಣೆ ಬಳಿಕ ಸುಹೇಲ್ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ಅವಧಿಯಲ್ಲಿ ಇನ್ನಷ್ಟು ಮಾಹಿತಿಯನ್ನು ಕಲೆಹಾಕಲು ಹಾಗೂ ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿಸಲು ಎನ್ಐಎ ಅಧಿಕಾರಿಗಳು ಮುಂದಾಗಿದ್ದಾರೆ.
ಪ್ರಾಥಮಿಕ ವಿಚಾರಣೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು, ಆರೋಪಿಯ ಸಂಪರ್ಕ ಜಾಲ, ಚಟುವಟಿಕೆಗಳು ಹಾಗೂ ಉಗ್ರ ಸಂಘಟನೆಗಳೊಂದಿಗೆ ಯಾವುದೇ ಸಂಬಂಧವಿದೆಯೇ ಎಂಬ ಕುರಿತು ತನಿಖೆ ತೀವ್ರಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯನ್ನು ಬಹಿರಂಗಪಡಿಸಲು ತನಿಖಾ ಸಂಸ್ಥೆಗಳು ಸದ್ಯ ನಿರಾಕರಿಸಿವೆ.