ಬಾಕಿ ಉಳಿದ ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಅರಣ್ಯ ಇಲಾಖೆಯಲ್ಲಿ ಯೋಜನೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆ ವಿಳಂಬವಾಗುತ್ತಿದೆ. ಅಗತ್ಯವಿರುವ ನಿಯಮಗಳನ್ನು ಪೂರೈಸಿರುವ ಯೋಜನೆಗಳ ಕಡತಗಳನ್ನು ಅನಗತ್ಯ ವಿಳಂಬವಿಲ್ಲದೆ ವಿಲೇವಾರಿ ಮಾಡಬೇಕು.
DK Shivkumar
ಸಿಎಂ ಡಿ.ಕೆ. ಶಿವಕುಮಾರ್
Updated on

ಬೆಂಗಳೂರು: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ, ಕಳಸಾ-ಬಂಡೂರಿ ಯೋಜನೆ, ಪೆರಿಫೆರಲ್ ರಿಂಗ್ ರಸ್ತೆ (PRR) ಸೇರಿದಂತೆ ವಿವಿಧ ಪ್ರಮುಖ ಅಭಿವೃದ್ಧಿ ಯೋಜನೆಗಳ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಸೋಮವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಅರಣ್ಯ ಇಲಾಖೆಯಲ್ಲಿ ಯೋಜನೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆ ವಿಳಂಬವಾಗುತ್ತಿದೆ. ಅಗತ್ಯವಿರುವ ನಿಯಮಗಳನ್ನು ಪೂರೈಸಿರುವ ಯೋಜನೆಗಳ ಕಡತಗಳನ್ನು ಅನಗತ್ಯ ವಿಳಂಬವಿಲ್ಲದೆ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (NBWL) ಕೆಲವು ತಾಂತ್ರಿಕ ಸ್ಪಷ್ಟೀಕರಣಗಳನ್ನು ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ (NIAS) ಹಾಗೂ ಇತರ ತಾಂತ್ರಿಕ ಸಮಿತಿಗಳಿಂದ ಕೇಳಿದೆ. ಈ ಯೋಜನೆಯ ಕಡತ ಈಗ ಕೇಂದ್ರ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಈ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಸಭೆ ನಡೆಸಲು ಮುಖ್ಯಮಂತ್ರಿ ಆಸಕ್ತಿ ತೋರಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಮೂಲಗಳು ತಿಳಿಸಿವೆ.

ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಯೋಜನೆಗಳಿಗೆ ಅನುಮತಿ, ಕರಾವಳಿ ನಿಯಂತ್ರಣ ವಲಯ (CRZ) ಸಂಬಂಧಿತ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.

DK Shivkumar
PRC ಬಗ್ಗೆ ಆತಂಕ ಬೇಡ; ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು SIR ನೋಂದಣಿ ಕಡ್ಡಾಯ: ಸಿಎಂ ಡಿ.ಕೆ.ಶಿವಕುಮಾರ್

ಬಾಕಿ ಉಳಿದಿರುವ ಎಲ್ಲಾ ಯೋಜನೆಗಳ ಸ್ಥಿತಿಗತಿ ವರದಿಯನ್ನು ತ್ವರಿತವಾಗಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಿಎಂ, ಅರಣ್ಯ ಪ್ರದೇಶದಲ್ಲಿರುವ ಲಂಟಾನಾ ಸೇರಿದಂತೆ ಕಳೆಗಿಡಗಳನ್ನು ತೆರವುಗೊಳಿಸಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಬಳಸುವಂತೆ ಸಲಹೆ ನೀಡಿದರು.

ಕಾಡು ಪ್ರಾಣಿಗಳ ಚಲನವಲನದ ಮೇಲೆ ನಿಗಾ ವಹಿಸಲು ಡ್ರೋನ್‌ಗಳ ಬಳಕೆ ಮಾಡುವಂತೆ ಸೂಚಿಸಿದ ಅವರು, ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಅಗತ್ಯವಿರುವಷ್ಟು ಹಣಕಾಸಿನ ನೆರವು ಸರ್ಕಾರದಿಂದ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

2025-26ನೇ ಸಾಲಿನಲ್ಲಿ ಕಾಡು ಪ್ರಾಣಿಗಳ ದಾಳಿಯಿಂದ ಬೆಳೆ ಹಾನಿ ಹಾಗೂ ಮಾನವ ಸಾವುಗಳಿಗೆ ಪರಿಹಾರವಾಗಿ 63.06 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com