

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ’ ಎಂದು ಶಂಕರ್11916 (shankar11916) ಎಂಬ ಇನ್ಸ್ಟಾಗ್ರಾಂ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಈ ಕಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂದೂ ಸಂಘಟನೆ ಕಾರ್ಯಕರ್ತನಾಗಿ ಗುರುತಿಸಿಕೊಂಡು ಕೊಲೆಯಾಗಿದ್ದ ಸುಹಾಸ್ ಶೆಟ್ಟಿ ಅವರ ಭಾವಚಿತ್ರ ಹೊಂದಿದ್ದ ಇನ್ಸ್ಟಾಗ್ರಾಂ ಪೇಜ್ನಲ್ಲಿ ಪೋಸ್ಟ್ ಮಾಡಲಾಗಿದೆ ಎನ್ನಲಾಗಿದೆ. ಇದರಿಂದಾಗಿ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.
ಘಟನೆ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿರುವ ಉಳ್ಳಾಲ ಪೊಲೀಸರು, ಕಮೆಂಟ್ ಹಾಕಿದ ವ್ಯಕ್ತಿಯನ್ನು ಪತ್ತೆಹಚ್ಚಿ ಬಂಧಿಸಲು ಶೋಧ ನಡೆಸುತ್ತಿದ್ದಾರೆ.
ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
'ಸಾಮಾಜಿಕ ಜಾಲತಾಣದಲ್ಲಿ ಮಾಡಲಾದ ಈ ರೀತಿಯ ಕಾಮೆಂಟ್ ಸ್ಪಷ್ಟವಾಗಿ ಅಪರಾಧವಾಗಿದೆ. ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದೆ. ಆರೋಪಿಯನ್ನು ಬಂಧಿಸಲಾಗುತ್ತದೆ. ಅಪರಾಧ ಮಾಡಿದವರ ವಿರುದ್ಧವೇ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Advertisement