

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022ರಲ್ಲಿ ನಡೆದಿದ್ದ 47 ವರ್ಷದ ವ್ಯಕ್ತಿಯ ಕೊಲೆ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ ಎನ್ ಅವರು ಆರೋಪಿ ಮುರುಗನ್ ನನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದರು.
ಅಲ್ಲದೇ 10 ಸಾವಿರ ರೂ. ದಂಡದೊಂದಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದರು. ಮಂಗಳೂರಿನ ಉಲ್ಲಂಜೆ ನಿವಾಸಿ ಹರೀಶ್ ಸಾಲ್ಯಾನ್ ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 19, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪಟ್ಟಣದ ಬಪ್ಪನಾಡು ಗ್ರಾಮದ ಮೂಲ್ಕಿ ಪೇಟೆಯ ಪ್ರವಾಸಿ ಕಾರ್ ಪಾರ್ಕಿಂಗ್ ಪ್ರದೇಶದ ಬಳಿ ಕೊಲೆ ನಡೆದಿತ್ತು. ಆರೋಪಿ ಸಿಮೆಂಟ್ ಕಾಂಕ್ರೀಟ್ನಲ್ಲಿದ್ದ ಕಲ್ಲಿನಿಂದ ಸಾಲ್ಯಾನ್ ಮೇಲೆ ದಾಳಿ ಮಾಡಿ, ಪದೇ ಪದೇ ಮುಖಕ್ಕೆ ಹೊಡೆದು ಸ್ಥಳದಲ್ಲೇ ಹತ್ಯೆ ಮಾಡಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿತ್ತು.
ಆರೋಪಿ ಮತ್ತು ಮೃತ ವ್ಯಕ್ತಿಯ ನಡುವಿನ ಹಣಕಾಸಿನ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣವನ್ನು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.
ಪಬ್ಲಿಕ್ ಪ್ರಾಸಿಕ್ಯೂಟರ್ ಜ್ಯೋತಿ ಪ್ರಮೋದ್ ನಾಯಕ್ ಪ್ರಾಸಿಕ್ಯೂಷನ್ ಪರ ವಾದಿಸಿದರು. ಸಾಕ್ಷ್ಯಾಧಾರ ಆಧಾರದ ಮೇಲೆ ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿತು ಮತ್ತು ಜೀವಾವಧಿ ಶಿಕ್ಷೆ ವಿಧಿಸಿತು.
Advertisement