

ಹುಬ್ಬಳ್ಳಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತದೆಯೇ ಎಂಬುದರ ಬಗ್ಗೆ ಈಗಲೇ ಏನನ್ನೂ ಊಹಿಸಲು ಸಾಧ್ಯವಾಗದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಬುಧವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಲ್ಫ್ ಪ್ರದೇಶದ ಪರಿಸ್ಥಿತಿ ಸಹಜವಾಗಿಯೇ ಭಾರತಕ್ಕೂ ಪರಿಣಾಮ ಬೀರುವ ಸಾಧ್ಯತೆ ಇದೆ. ಆದರೆ, ದೇಶದಲ್ಲಿ ಸುಮಾರು 70 ದಿನಗಳ ಕಾಲ ಬಳಸಲು ಸಾಕಾಗುವಷ್ಟು ಪೆಟ್ರೋಲಿಯಂ ಸಂಗ್ರಹವಿದೆ ಎಂದು ಈಗಾಗಲೇ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿಯವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.
ರಷ್ಯಾ ಸೇರಿದಂತೆ ಇತರೆ ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡುವ ಸಾಧ್ಯತೆಗಳ ಕುರಿತು ವಾಣಿಜ್ಯ, ಪೆಟ್ರೋಲಿಯಂ ಹಾಗೂ ವಿದೇಶಾಂಗ ಇಲಾಖೆ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ. ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರ ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡೇ ಇರುತ್ತದೆ ಎಂದು ತಿಳಿಸಿದರು.
ಇರಾನ್ ಸುಪ್ರೀಂ ನಾಯಕ ಖಮೇನಿ ಹತ್ಯೆ ಕುರಿತಾಗಿ ಕೇಂದ್ರ ಸರ್ಕಾರ ಸ್ಪಷ್ಟ ಪ್ರತಿಕ್ರಿಯೆ ನೀಡಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ, ಇದು ಸೂಕ್ಷ್ಮ ವಿಷಯವಾಗಿದ್ದು, ರಾಜಕೀಯ ಮಾಡುವ ಸಮಯ ಇದಲ್ಲ ಎಂದರು.
ಭಾರತದ ವಿದೇಶಾಂಗ ನೀತಿ ದುರ್ಬಲವಾಗಿದ್ದರೆ 37 ದೇಶಗಳು ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡುತ್ತವೆಯೇ ಎಂದೂ ಇದೇ ವೇಳೆ ಪ್ರಶ್ನಿಸಿದರು.
Advertisement