

ಬೆಂಗಳೂರು: ನಗರದಲ್ಲಿ ಅಕ್ರಮ ಜಾಹೀರಾತುಗಳ ಹಾವಳಿ ಹೆಚ್ಚಾಗಿ ಹೋಗಿದ್ದು, ಇದು ನಗರದ ಸೌಂದರ್ಯವನ್ನು ಹಾಳು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ.
ನಗರದಲ್ಲಿ ಇನ್ನು ಮುಂದೆ ಅಕ್ರಮವಾಗಿ ಜಾಹೀರಾತು ಹಾಕಿದರೆ, ಜಾಹೀರಾತು ಹಾಕಿದವರಷ್ಟೇ ಅಲ್ಲದೆ, ಅವುಗಳನ್ನು ಮುದ್ರಿಸಿದವರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದೆ.
ಗುರುವಾರ ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಶ್ಚಿಮ ಮಹಾನಗರ ಪಾಲಿಕೆ ವ್ಯಾಪ್ತಿಯ ನಾಗರಿಕರ ಸಮಸ್ಯೆಗಳನ್ನು ಆಲಿಸಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಮಾತನಾಡಿದರು.
ಈ ವೇಳೆ ಅನಧಿಕೃತ ಜಾಹೀರಾತುಗಳನ್ನು ತಕ್ಷಣ ತೆರವುಗೊಳಿಸಿ, ಜಾಹೀರಾತು ಹಾಕಿದವರ ಹಾಗೂ ಜಾಹೀರಾತುಗಳನ್ನು ಮುದ್ರಿಸಿದವರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಅಕ್ರಮ ಜಾಹೀರಾತು ಹಾಕುವವರ ವಿರುದ್ಧ ಪ್ರಕರಣ ದಾಖಲಿಸಲು ಕಾನೂನು ವಿಭಾಗದಿಂದ ಪ್ರತ್ಯೇಕ ಅಧಿಕಾರಿಯನ್ನು ನೇಮಿಸುವಂತೆಯೂ ನಿರ್ದೇಶನ ನೀಡಿದರು.
ಇದೇ ವೇಳೆ ಜಿಬಿಎ ವ್ಯಾಪ್ತಿಯ ಪ್ರಮುಖ ರಸ್ತೆಗಳಾದ ಆರ್ಟೀರಿಯಲ್, ಸಬ್ಆರ್ಟೀರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಡಾಂಬರೀಕರಣ, ಪಾದಚಾರಿ ಮಾರ್ಗ ಅಭಿವೃದ್ಧಿ ಮತ್ತು ರಸ್ತೆ ಬದಿಯ ಒಳಚರಂಡಿ ಸ್ವಚ್ಛತೆ ಕಾರ್ಯಗಳನ್ನು ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ಗಳಿಗೆ ಸೂಚಿಸಿದರು.
ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತ ರಾಜೇಂದ್ರ ಕೆ.ವಿ. ಮಾತನಾಡಿ, ರಸ್ತೆಗಳ ಬದಿಯಲ್ಲಿ ಬಿದ್ದಿರುವ ಕೊಂಬೆಗಳು ಮತ್ತು ದೊಡ್ಡ ಮರಗಳನ್ನು ತೆರವುಗೊಳಿಸಲು ಪಾಲಿಕೆಯ ಅರಣ್ಯ ವಿಭಾಗಕ್ಕೆ ಕ್ರೇನ್ ಖರೀದಿಸಲು ಸೂಚನೆ ನೀಡಲಾಗಿದೆ ಎಂದರು.
ಇನ್ನ ರಸ್ತೆ ಬದಿಯಲ್ಲಿ ಬಿಟ್ಟುಹೋಗಿರುವ ವಾಹನಗಳನ್ನು ತೆರವುಗೊಳಿಸಲು ಈಗಾಗಲೇ ಟೋಯಿಂಗ್ ವಾಹನಗಳನ್ನು ಖರೀದಿಸಲಾಗಿದೆ. ಅವುಗಳನ್ನು ವಿಲೇವಾರಿ ಮಾಡಲು ಸ್ಥಳ ಗುರುತಿಸುವ ಕಾರ್ಯ ನಡೆಯುತ್ತಿದ್ದು, ಸ್ಥಳ ಸಿಕ್ಕ ತಕ್ಷಣ ತೆರವು ಕಾರ್ಯ ಆರಂಭಿಸಲಾಗುತ್ತದೆ ಎಂದು ಹೇಳಿದರು.
ಅದೇ ರೀತಿ ಪಶ್ಚಿಮ ನಗರ ಪಾಲಿಕೆಯ ಎಲ್ಲಾ ವಾರ್ಡ್ಗಳಲ್ಲಿ ವಾರ್ಡ್ ಸಮಿತಿ ಸಭೆಗಳನ್ನು ನಡೆಸಿ ನಾಗರಿಕರ ಸಮಸ್ಯೆಗಳನ್ನು ಆಲಿಸಿ ಶೀಘ್ರ ಪರಿಹಾರ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
Advertisement