

ಬೆಂಗಳೂರು: ಕೆಎಎಸ್ (KAS) ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ರಾಜ್ಯ ಸರ್ಕಾರಕ್ಕೆ ವಿವರವಾದ ಸ್ಪಷ್ಟನೆ ಸಲ್ಲಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಆಯೋಗ ತನ್ನ ವರದಿಯಲ್ಲಿ ತಿಳಿಸಿದೆ.
ಇತ್ತೀಚೆಗೆ ನಡೆದ ಕೆಎಎಸ್ ಪರೀಕ್ಷೆಯಲ್ಲಿ ಒಂದೇ ಪರೀಕ್ಷಾ ಕೊಠಡಿಯಿಂದ ಹಲವರು ಉತ್ತೀರ್ಣರಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ರಾಜ್ಯ ಸರ್ಕಾರ 24 ಗಂಟೆಗಳೊಳಗೆ ವಿವರಣೆ ನೀಡುವಂತೆ ಕೆಪಿಎಸ್ಸಿಗೆ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆಯಂತೆ ಕೆಪಿಎಸ್ಸಿ ಕಾರ್ಯದರ್ಶಿ ಜ್ಯೋತಿ ಅವರು ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದ್ದಾರೆ.
ಪರೀಕ್ಷಾ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿಯೇ ನಡೆದಿದ್ದು ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ.
ಒಂದೇ ಪರೀಕ್ಷಾ ಕೊಠಡಿಯಿಂದ 15 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂಬ ಆರೋಪ ಸರಿಯಲ್ಲ. ವಾಸ್ತವವಾಗಿ ಒಂದೇ ಕೊಠಡಿಯಿಂದ 11 ಮಂದಿ ಮಾತ್ರ ಉತ್ತೀರ್ಣರಾಗಿದ್ದು, ಅದು ಕೇವಲ ಯಾದೃಚ್ಛಿಕ ಎಂದು ತಿಳಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಆಯೋಗದ ಅಧಿಕಾರಿಗಳು ಪರಿಶೀಲಿಸಿದ್ದು, ನಕಲು, ಸಂಚು ಅಥವಾ ಬೇರೆ ಯಾವುದೇ ಅಕ್ರಮದ ಲಕ್ಷಣಗಳು ಕಂಡುಬಂದಿಲ್ಲ ಎಂದು ವರದಿ ಹೇಳಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದರೂ, ಇದುವರೆಗೆ ಯಾವುದೇ ಅಭ್ಯರ್ಥಿ ಅಥವಾ ವ್ಯಕ್ತಿಯಿಂದ ಅಧಿಕೃತ ದೂರು ಆಯೋಗಕ್ಕೆ ಸಲ್ಲಿಕೆಯಾಗಿಲ್ಲ ಎಂದು ಕೆಪಿಎಸ್ಸಿ ತಿಳಿಸಿದೆ.
ಕೆಪಿಎಸ್ಸಿ ಸಲ್ಲಿಸಿದ ವರದಿಯನ್ನು ಸರ್ಕಾರ ಇದೀಗ ಪರಿಶೀಲಿಸುತ್ತಿದ್ದು, ಸಾರ್ವಜನಿಕ ಒತ್ತಡ ಮತ್ತು ಅಭ್ಯರ್ಥಿಗಳ ಆತಂಕದ ಹಿನ್ನೆಲೆ ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವ ಸಾಧ್ಯತೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ
Advertisement