Karnataka Budget 2026: ಸುರಂಗ ಮಾರ್ಗ ನಿರ್ಮಾಣ ಸೇರಿ ಬೆಂಗಳೂರು ನಗರಕ್ಕೆ ಸಿದ್ದರಾಮಯ್ಯ ಬಜೆಟ್ ನಲ್ಲಿ ಹೊಸ ಘೋಷಣೆಯೇನು?

ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ.
CM Siddaramaiah presents his 17th budget
ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ
Updated on

ಬೆಂಗಳೂರು: ಬೆಂಗಳೂರು ಕೇವಲ ಒಂದು ನಗರವಷ್ಟೇ ಅಲ್ಲ, ಇದು ಅಸಂಖ್ಯಾತ ಕನಸುಗಳ ನೆಲೆಬೀಡು’ ಎಂದು ಬಣ್ಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಲಿಕಾನ್ ಸಿಟಿಯನ್ನು ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರವನ್ನಾಗಿ ಮಾಡುವ ಉದ್ದೇಶದಿಂದ ಈ ಬಾರಿಯ ಬಜೆಟ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಬೃಹತ್ ಯೋಜನೆಗಳನ್ನು ಘೋಷಿಸಿದ್ದಾರೆ. ಇದರ ಜೊತೆಗೆ ರಾಜ್ಯದ ಇತರೆ ನಗರಗಳ ಅಭಿವೃದ್ಧಿಗೂ ಭರ್ಜರಿ ಕೊಡುಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ. 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗುತ್ತದೆ. ಮೊದಲನೇ ಹಂತದಲ್ಲಿ 17 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಿಸಲಾಗುತ್ತದೆ.

ಹೆಬ್ಬಾಳ-ಸಿಲ್ಕ್ ಬೋರ್ಡ್​ವರೆಗೂ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ 17,780 ಕೋಟಿ ರೂಪಾಯಿ ಮೊತ್ತಕ್ಕೆ ಟೆಂಡರ್ ಕರೆಯಲಾಗುತ್ತದೆ. ಹೆಬ್ಬಾಳ-ಮೇಕ್ರಿ ಸರ್ಕಲ್​ವರೆಗೂ ಸುರಂಗ ಮಾರ್ಗ ನಿರ್ಮಿಸಲಾಗುತ್ತದೆ.ಸುರಂಗ ಮಾರ್ಗ ಹಾಗೂ ಮೇಲ್ಸೇತುವೆ ರಸ್ತೆಗೆ 2,250 ಕೋಟಿ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

1. ಟ್ರಾಫಿಕ್‌ಗೆ ಬ್ರೇಕ್, 40 ಸಾವಿರ ಕೋಟಿಯ ಟನಲ್ ರಸ್ತೆ

ಬೆಂಗಳೂರಿನ ಟ್ರಾಫಿಕ್ ದಟ್ಟಣೆ ನಿವಾರಿಸಲು ಬರೋಬ್ಬರಿ 40,000 ಕೋಟಿ ರೂ. ಅಂದಾಜು ವೆಚ್ಚದಲ್ಲಿ 40 ಕಿ.ಮೀ ಉದ್ದದ ಟನಲ್ ರಸ್ತೆಯನ್ನು (Tunnel Road) BOOT ಮಾದರಿಯಲ್ಲಿ ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಮೊದಲ ಹಂತದಲ್ಲಿ 17,780 ಕೋಟಿ ರೂ. ವೆಚ್ಚದಲ್ಲಿ 17 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ಯೋಜನೆಗೆ ಟೆಂಡರ್ ಕರೆಯಲಾಗಿದೆ. ಹೆಬ್ಬಾಳ ಜಂಕ್ಷನ್‌ನಿಂದ ಮೇಖ್ರಿ ಸರ್ಕಲ್‌ವರೆಗೆ ಸುರಂಗ ಮಾರ್ಗ ಹಾಗೂ ಮೇಲ್ಸೇತುವೆಯನ್ನು ಬಿಡಿಎ ವತಿಯಿಂದ 2,250 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

2. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 7 ಸಾವಿರ ಕೋಟಿ ಅನುದಾನ

ಬೆಂಗಳೂರಿನ ನಾಗರಿಕರಿಗೆ ಪಾರದರ್ಶಕ ಆಡಳಿತ ನೀಡಲು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ಹಾಗೂ ಐದು (5) ಮಹಾನಗರ ಪಾಲಿಕೆಗಳನ್ನು ಸ್ಥಾಪಿಸಲಾಗುತ್ತಿದೆ. ಈ ಐದೂ ಪಾಲಿಕೆಗಳು 'ಮುನಿಸಿಪಲ್ ಬಾಂಡ್' ಹೊರಡಿಸುವ ಮೂಲಕ ಅಭಿವೃದ್ಧಿಗೆ ಸಂಪನ್ಮೂಲ ಕ್ರೋಢೀಕರಿಸಲಿವೆ. ಅಲ್ಲದೆ, ಬೆಂಗಳೂರು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ನೀಡುತ್ತಿದ್ದ 7,000 ಕೋಟಿ ರೂ. ಅನುದಾನವನ್ನು ಪ್ರಸಕ್ತ ಸಾಲಿನಲ್ಲೂ ಮುಂದುವರಿಸಲಾಗಿದೆ.

CM Siddaramaiah presents his 17th budget
Karnataka Budget 2026 Live updates: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ, 3 ಗಂಟೆ 36 ನಿಮಿಷಗಳ ಕಾಲ ಸುಧೀರ್ಷ ಭಾಷಣ ಮಾಡಿದ ಸಿದ್ದರಾಮಯ್ಯ
CM Siddaramaiah presents his 17th budget
ಕರ್ನಾಟಕ ಬಜೆಟ್ 2026: 'ಗೃಹಲಕ್ಷ್ಮಿ'ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ, 28 ಸಾವಿರ ಕೋಟಿ ಹಂಚಿಕೆ

3. ನಮ್ಮ ಮೆಟ್ರೋ ವಿಸ್ತರಣೆ, ಬಿಬಿಎಂಪಿ ಕಾಮಗಾರಿ

2026-27ನೇ ಸಾಲಿನಲ್ಲಿ 41 ಕಿ.ಮೀ ಹೆಚ್ಚುವರಿ ಮೆಟ್ರೋ ಮಾರ್ಗಗಳನ್ನು ಪೂರ್ಣಗೊಳಿಸಲಾಗುವುದು. ಇದರಿಂದ ನಿತ್ಯ 15 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ರಸ್ತೆಗಳ ಬಾಳಿಕೆಗಾಗಿ ಮುಂದಿನ 3 ವರ್ಷಗಳಲ್ಲಿ 3,000 ಕೋಟಿ ರೂ. ವೆಚ್ಚದಲ್ಲಿ 450 ಕಿ.ಮೀ ಉದ್ದದ ರಸ್ತೆಗಳಿಗೆ 'ವೈಟ್ ಟಾಪಿಂಗ್' ಮಾಡಲಾಗುವುದು. ಬಿಬಿಎಂಪಿ ಸ್ವಂತ ಅನುದಾನದಲ್ಲಿ ಮುಂದಿನ 3 ವರ್ಷಗಳಲ್ಲಿ 175 ಜಂಕ್ಷನ್‌ಗಳ ಸೌಂದರ್ಯೀಕರಣ, 500 ಕಿ.ಮೀ ಪಾದಚಾರಿ ಮಾರ್ಗ, ಹಾಗೂ 100 ಸ್ಕೈವಾಕ್ (Sky Walk) ನಿರ್ಮಾಣ ಮಾಡಲಾಗುವುದು ಎಂದರು.

4. ಕಾವೇರಿ 6ನೇ ಹಂತದ ಯೋಜನೆ

ನಗರದ 1.40 ಕೋಟಿ ಜನರಿಗೆ ಕುಡಿಯುವ ನೀರು ಪೂರೈಸಲು, JICA ನೆರವಿನೊಂದಿಗೆ 6,939 ಕೋಟಿ ರೂ. ವೆಚ್ಚದಲ್ಲಿ 'ಕಾವೇರಿ 6ನೇ ಹಂತದ ಯೋಜನೆ'ಯನ್ನು ಜಾರಿಗೊಳಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ 6 ಟಿ.ಎಂ.ಸಿ ನೀರು ಪೂರೈಕೆಯಾಗಲಿದೆ.

5. ಬೆಂಗಳೂರು ಬಿಸಿನೆಸ್ ಕಾರಿಡಾರ್ & ರಾಜಕಾಲುವೆ ಅಭಿವೃದ್ಧಿ

ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗಿನ 73 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಭಾಗ-1 ನಿರ್ಮಾಣಕ್ಕೆ ಭೂಸ್ವಾಧೀನ ಕಾರ್ಯ ಭರದಿಂದ ಸಾಗಿದ್ದು, 4 ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ವಿಶ್ವಬ್ಯಾಂಕ್ ನೆರವಿನೊಂದಿಗೆ ರಾಜಕಾಲುವೆಗಳ ಅಭಿವೃದ್ಧಿಗೆ ಒಟ್ಟು 2,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ.

6. ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, 7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್​ಪೋರ್ಟ್​ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

CM Siddaramaiah presents his 17th budget
'ಮುಖ್ಯಮಂತ್ರಿ ಕೃಷಿ ವಿಸ್ತಾರ': ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆಗಳೇನು?

ರಾಜ್ಯದ ನಗರಾಭಿವೃದ್ಧಿಗೆ ಸಿಕ್ಕಿದ್ದೇನು?

ಹೊಸ ಪಾಲಿಕೆಗಳಿಗೆ ತಲಾ 200 ಕೋಟಿ: ಹೊಸದಾಗಿ ಮೇಲ್ದರ್ಜೆಗೇರಿಸಲಾದ ರಾಯಚೂರು, ಬೀದರ್ ಮತ್ತು ಹಾಸನ ಮಹಾನಗರ ಪಾಲಿಕೆಗಳಿಗೆ 'ಮಹಾತ್ಮಾ ಗಾಂಧಿ ನಗರ ವಿಕಾಸ್ ಯೋಜನೆ 2.0' ರಡಿ ತಲಾ 200 ಕೋಟಿ ರೂ. ಒದಗಿಸಲಾಗುವುದು.

ನಗರೋತ್ಥಾನ ಯೋಜನೆ: ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಮೂಲಸೌಕರ್ಯ ಅಭಿವೃದ್ಧಿಗೆ 3,885 ಕೋಟಿ ರೂ. ಮೀಸಲಿಟ್ಟಿದ್ದು, ಪ್ರಸಕ್ತ ಸಾಲಿಗೆ 500 ಕೋಟಿ ರೂ. ಬಿಡುಗಡೆ ಮಾಡಲಾಗುವುದು.

ಏಕೀಕೃತ ಆಸ್ತಿ ತೆರಿಗೆ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಏಕೀಕೃತ ಆಸ್ತಿ ತೆರಿಗೆ (Unified Property Tax) ವ್ಯವಸ್ಥೆಯನ್ನು ಜಾರಿಗೊಳಿಸಿ ಇ-ಆಸ್ತಿ ತಂತ್ರಾಂಶದೊಂದಿಗೆ ಸಂಯೋಜಿಸಲಾಗುವುದು.

ಒಳಚರಂಡಿ ಅಭಿವೃದ್ಧಿ: ಆನೇಕಲ್, ನೆಲಮಂಗಲ, ದೊಡ್ಡಬಳ್ಳಾಪುರ, ಭದ್ರಾವತಿ, ದೇವನಹಳ್ಳಿ, ಮೈಸೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆಳಂದ, ಅಫಜಲ್‌ಪುರ, ಚಿತ್ತಾಪುರ, ಯಾದಗಿರಿ ಸೇರಿದಂತೆ ಹಲವು ಪಟ್ಟಣಗಳಲ್ಲಿ ನೂತನ ಒಳಚರಂಡಿ (UGD) ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಒಟ್ಟಾರೆಯಾಗಿ, ಈ ಬಾರಿಯ ನಗರಾಭಿವೃದ್ಧಿ ಬಜೆಟ್ ಮೂಲಸೌಕರ್ಯ, ಸಂಚಾರ ದಟ್ಟಣೆ ನಿವಾರಣೆ ಹಾಗೂ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಿದೆ.

ಬೆಂಗಳೂರು ಸಮೀಪ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ

ಬೆಂಗಳೂರು ನಗರ ಜಿಲ್ಲೆಯ ಆನೆಕಲ್ ತಾಲ್ಲೂಕಿನಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ವತಿಯಿಂದ ‘ಕೆಎಚ್‌ಬಿ ಸೂರ್ಯ ಕ್ರೀಡಾ ಗ್ರಾಮ’ ಎಂಬ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಲು ಅನುಕೂಲವಾಗುವ ಕ್ರೀಡಾ ಸಮುಚ್ಚಯವನ್ನು ನಿರ್ಮಿಸಲಾಗುತ್ತದೆ, ಬೆಂಗಳೂರು ಅಭಿವೃದ್ಧಿಗಾಗಿ 7,000 ಕೋಟಿ ರೂಪಾಯಿ ನಿಧಿಯನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com