

ಬೆಂಗಳೂರು: ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಮೃತ ಶಿವಕುಮಾರ್ ಮೈ ತುಂಬಾ ಸಾಲ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೊ ಕಾಲ್ ಮಾಡಿ, ನನಗೆ ಜೀವನ ಸಾಕಾಗಿದೆ, ಸಾಯುತ್ತೀನಿ ಎಂದು ಹೇಳಿ ಫೆ.17ರಂದು ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಶಿವಕುಮಾರ್ ಅವರು ದಾವಣಗೆರೆ ಮೂಲದವರಾಗಿದ್ದು, ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರ ಬಳಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.
ಮೂಲಗಳ ಪ್ರಕಾರ, ಶಿವಕುಮಾರ್ ಅವರನ್ನು ಸುಮಾರು 6 ತಿಂಗಳ ಹಿಂದೆಯೇ ಕೆಲಸದಿಂದ ತೆಗೆದುಹಾಕಲಾಗಿತ್ತು. ಶಾಸಕರ ಕಚೇರಿಯಲ್ಲಿ ಕೆಲಸ ಮಾಡುವಾಗ ಹಲವು ಅಕ್ರಮಗಳನ್ನು ಎಸಗಿದ್ದಾರೆ ಎಂಬ ಗಂಭೀರ ಆರೋಪ ಅವರ ಮೇಲೆ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಶಾಸಕ ಬಸವರಾಜ್ ಶಿವಗಂಗಾ ಅವರು ಶಿವಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಿದ್ದರು. ಉನ್ನತ ಮಟ್ಟದ ಕೆಲಸ ಕಳೆದುಕೊಂಡಿದ್ದರಿಂದ ಶಿವಕುಮಾರ್ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.
ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾಡ್ಜ್ನ ಸಿಸಿಟಿವಿ ದೃಶ್ಯಾವಳಿ ಹಾಗೂ ಶಿವಕುಮಾರ್ ಅವರ ಮೊಬೈಲ್ ಫೋನ್ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
Advertisement