

ಬಳ್ಳಾರಿ: ಬಳ್ಳಾರಿಯಲ್ಲಿ ಖಾಸಗಿ ವಸತಿ ಶಾಲೆಯಲ್ಲಿ ಮಲಗಿದ್ದ ತನ್ನ ಸಹಪಾಠಿಗಳ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಓರ್ವನ ಸಾವಿಗೂ ಕಾರಣನಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿ, ಬಂಧನಕ್ಕೊಳಪಡಿಸಿದ್ದಾರೆ.
ಮಾರ್ಚ್ 7 ರಾತ್ರಿಯಿಂದ ನಾಪತ್ತೆಯಾಗಿದ್ದ ಬಾಲಕನ ಪತ್ತೆಗಾಗಿ ಬಳ್ಳಾರಿ ಪೊಲೀಸರು ಪ್ರತ್ಯೇಕ ಏಳು ತಂಡ ರಚನೆ ಮಾಡಿದ್ದರು. ಬಳ್ಳಾರಿ ನಗರದ ಸುಮಾರು 7 ಸಾವಿರ ಸಿಸಿಟಿವಿ ಪರಿಶೀಲಿಸಿದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಬಾಲಕನನ್ನು ಪತ್ತೆ ಹಚ್ಚಿದ್ದಾರೆ.
ಕೊಲೆ ಆರೋಪಿ ಬಾಲಕನಿಗೆ ವೈದ್ಯರ ಮೂಲಕ ಕೌನ್ಸಿಲಿಂಗ್ ಮಾಡಿಸಿ, ಘಟನೆಗೆ ಕಾರಣ ಹುಡುಕುವ ಪ್ರಯತ್ನವನ್ನು ಪೊಲೀಸರು ಮಾಡುತ್ತಿದ್ದಾರೆ. ನಿಯಮಾನುಸಾರ ವೈದ್ಯರ ತಂಡ ವೈದ್ಯಕೀಯ ಪರೀಕ್ಷೆ ನಡೆಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತನ ಕೃತ್ಯದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆ ಮುಂದುುರದಿದೆ ಎಂದು ಹೇಳಿದ್ದಾರೆ.
ಪ್ರಾಥಮಿಕ ತನಿಖೆ ಪ್ರಕಾರ, ವಸತಿಗೃಹದಲ್ಲಿ ವಾರ್ಡನ್ ಮೇಲ್ವಿಚಾರಣೆಯಲ್ಲಿ ಒಟ್ಟು ಒಂಬತ್ತು ವಿದ್ಯಾರ್ಥಿಗಳಿದ್ದರು. ಊಟದ ನಂತರ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ನಿದ್ರಿಸುತ್ತಿದ್ದಾಗ ಆರೋಪಿ ಬಾಲಕ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ರಾಡ್ ಮತ್ತು ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ.
ಈ ದಾಳಿಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಇನ್ನೂ ಏಳು ಮಂದಿ ಗಾಯಗೊಂಡಿದ್ದಾರೆ. ಸಣ್ಣ ವಿಚಾರಕ್ಕೆ ನಡೆದಿರುವ ಜಗಳದಿಂದ ಘಟನೆ ನಡೆದಿರಬಹುದು ಎಂದು ಶಂಕಿಸಲಾಗುತ್ತಿದೆ. ಈ ಸಂಬಂಧ ಬ್ರೂಸ್ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.
Advertisement