Karnataka Assembly session: ಅಂಗನವಾಡಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಿಧಾನಸಭೆಯಲ್ಲಿಂದು ತಿಳಿಸಿದರು.
ಪ್ರಶ್ತೋತ್ತರ ಕಲಾಪದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದರು.
ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂಥ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಸಚಿವರು ಮಾಹಿತಿ ಮಾಡಿದರು.
ಇನ್ನು ಉಡುಪಿ ಜಿಲ್ಲೆಯಲ್ಲಿ 26 ಅಂಗನವಾಡಿ ಕಾರ್ಯಕರ್ತೆಯರು ಹಾಗು 132 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಹಾಗು 131 ಅಂಗನವಾಡಿ ಸಹಾಯಕಿ ಹುದ್ದೆಗಳ ಆನ್ಲೈನ್ ನೇಮಕಾತಿ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದ್ದು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಮುಂದಿನ ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಸಕರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಆಯ್ಕೆ ಆಗುವುದು ವಿಳಂಬವಾಗಿದ್ದರಿಂದ ಸಹಾಯಧನ ಪಾವತಿಗೆ ತಡವಾಗಿದೆ. ಈ ಸಂಬಂಧ ಸಮಿತಿ ಸಭೆಗಳನ್ನು ತುರ್ತಾಗಿ ನಡೆಸಿ, ಶಾಸಕರನ್ನು ಖುದ್ದಾಗಿ ಭೇಟಿ ಮಾಡಿ ಆಯ್ಕೆ ಸಮಿತಿ ಸಭೆಯನ್ನು ನಡೆಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಈ ಮಧ್ಯೆ ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯನ್ ಕೌನ್ಸುಲೇಟ್ ಜನರಲ್ ಕಚೇರಿಯ ಕೌನ್ಸುಲ್ ಜನರಲ್ ಹಿಲರಿ ಮ್ಯಾಕ್ ಗೀಚಿ ಮತ್ತು ಉಪ ಕೌನ್ಸುಲ್ ಹ್ಯಾರೀಟ್ ಅವರನ್ನೊಳಗೊಂಡ ನಿಯೋಗ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ, ಮಾತುಕತೆ ನಡೆಸಿತು.
ಇದೇ ವೇಳೆ ಸಚಿವರೊಂದಿಗೆ ಉಭಯ ದೇಶಗಳ ನಡುವಿನ ಹಲವು ವಿಚಾರಗಳನ್ನು ಚರ್ಚೆ ನಡೆಸಲಾಯಿತು. ಕರ್ನಾಟಕದಲ್ಲಿ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳ ಬಗ್ಗೆ ಸಚಿವೆ ಲಕ್ಷ್ಮೀ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಹಂಚಿಕೊಂಡರು.

