

ಬೆಂಗಳೂರು/ನವದೆಹಲಿ: ದೇಶದಲ್ಲಿ ಇಂಧನ ಸರಬರಾಜು ಕುರಿತು ಯಾವುದೇ ಆತಂಕ ಬೇಡ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಜನತೆಗೆ ಭರವಸೆ ನೀಡಿದ್ದಾರೆ.
ಸಂಸತ್ ಬಜೆಟ್ ಅಧಿವೇಶನದ ಬಳಿಕ ಮಾತನಾಡಿದ ಅವರು, ಇಂಧನ ಸವಾಲುಗಳನ್ನು ಎದುರಿಸಲು ಭಾರತ ಸಿದ್ಧವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶಕ್ಕೆ ಇದೇ ವಿಶ್ವಾಸವನ್ನು ನೀಡಲು ಬಯಸುತ್ತಾರೆ ಎಂದು ಹೇಳಿದರು.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ಇಂಧನ ಸರಬರಾಜು ಕುರಿತು ಆತಂಕಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿಯವರು ಹೇಳಿಕೆ ನೀಡಿದ್ದಾರೆ.
ಯುದ್ಧ ಹಲವು ದಿನಗಳಿಂದ ನಡೆಯುತ್ತಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಸರಬರಾಜಿನಲ್ಲಿ ಯಾವುದೇ ಸಮಸ್ಯೆ ಇಲ್ಲ. ಹಡಗುಗಳ ಮೂಲಕ ಸರಬರಾಜು ನಡೆಯುತ್ತಿದೆ. ಹೀಗಾಗಿ ದೇಶದ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗುತ್ತದೆ. ಆದರೆ, ಜನರು ಆತಂಕದಿಂದ ಹೆಚ್ಚಿನ ಪ್ರಮಾಣದಲ್ಲಿ ಖರೀದಿ ಮಾಡಬಾರದು ಎಂದು ಮನವಿ ಮಾಡಿದ್ದಾರೆ.
ಈ ನಡುವೆ ಪೆಟ್ರೋಲ್ ಬಂಕ್ಗಳಲ್ಲಿ ಅಥವಾ ಗೃಹ ಬಳಕೆಯ ಎಲ್ಪಿಜಿ ಸರಬರಾಜಿನಲ್ಲಿ ತಕ್ಷಣದ ಕೊರತೆ ಇಲ್ಲ. ಜನರು ಸಂಗ್ರಹಿಸುವ ಪ್ರಯತ್ನ ಮಾಡಿದರೆ ಕೃತಕ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಬೊಮ್ಮಾಯಿ ಹೇಳಿಕೆಗೆ ಅನುಗುಣವಾಗಿ ಪ್ರಧಾನಿ ನರೇಂದ್ರ ಮೋದಿ ಕೂಡ ಜನರು ಶಾಂತವಾಗಿರಬೇಕು ಎಂದು ಕರೆ ನೀಡಿದ್ದು, ಜಾಗತಿಕ ಅನಿಶ್ಚಿತತೆಯ ನಡುವೆಯೂ ಅಗತ್ಯ ಇಂಧನ ಸಂಪನ್ಮೂಲಗಳ ಸರಬರಾಜು ನಿರಂತರವಾಗಿರುವಂತೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
Advertisement