

ಬೆಂಗಳೂರು: ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಗುರುವಾರ ಹೇಳಿದರು.
ವಿಧಾನಪರಿಷತ್ನಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಪ್ರಕರಣಗಳನ್ನು ಸಮಯಕ್ಕೆ ಸರಿಯಾಗಿ ಪತ್ತೆಹಚ್ಚುವುದು ಮತ್ತು ಜಾಗೃತಿ ಮೂಡಿಸುವುದರಿಂದ ಈ ಇಳಿಕೆ ಕಂಡುಬಂದಿದೆ ಎಂದು ಹೇಳಿದರು.
ರಾಜ್ಯದಲ್ಲಿ 2023ರಲ್ಲಿ 22,255 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದ್ದರೆ, 2025ರ ವೇಳೆಗೆ 14,899ಕ್ಕೆ ಇಳಿಕೆಯಾಗಿದೆ. ಪೊಲೀಸ್ ಇಲಾಖೆಯ ಪರಿಣಾಮಕಾರಿ ಕ್ರಮಗಳಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಸೈಬರ್ ಅಪರಾಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಒಂದು ಪ್ರಸಿದ್ಧ ಕಂಪನಿಯ ತಾಂತ್ರಿಕ ನೌಕರನೇ ಡಿಜಿಟಲ್ ಅರೆಸ್ಟ್ ಪ್ರಕರಣದಲ್ಲಿ ರೂ.32 ಕೋಟಿ ಕಳೆದುಕೊಂಡಿದ್ದಾರೆಂದು ಹೇಳಿದರು.
ಈ ವರ್ಷ 345 ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಾಖಲಾಗಿದ್ದು, ಸುಮಾರು ರೂ.115 ಕೋಟಿ ವಂಚನೆ ನಡೆದಿದೆ. ಅನೇಕ ಬ್ಯಾಂಕ್ ಖಾತೆಗಳು ಹ್ಯಾಕ್ ಆಗುತ್ತಿದ್ದು, ವಿದ್ಯಾವಂತರು ಮತ್ತು ತಾಂತ್ರಿಕ ಜ್ಞಾನ ಹೊಂದಿದವರೂ ಸಹ ತಮ್ಮ ದುಡಿಮೆಯ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಸೈಬರ್ ಅಪರಾಧ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಸೈಬರ್ ಅಪರಾಧ ತಡೆಗೆ ಕೈಗೊಳ್ಳುತ್ತಿರುವ ವಿಶೇಷ ಕಾರ್ಯಗಳಿಗೆ ಇನ್ಫೋಸಿಸ್ ಸಂಸ್ಥೆ 20 ಕೋಟಿ ರೂ.ನೀಡಿದೆ. ಪ್ರತಿ ಜಿಲ್ಲಾ ಕೇಂದ್ರದಲ್ಲೂ ಸೈಬರ್ ಅಪರಾಧ ಪೊಲೀಸ್ ಠಾಣೆ ಸ್ಥಾಪಿಸುವ ಯೋಜನೆಯೂ ಇದೆ ಎಂದು ಮಾಹಿತಿ ನೀಡಿದರು.
ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 82,960 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಸೈಬರ್ ಅಪರಾಧ ಪೀಡಿತರಿಗೆ ಸಹಾಯ ಮಾಡಲು ಕೇಂದ್ರ ಗೃಹ ಸಚಿವಾಲಯವು 1930 ಟೋಲ್-ಫ್ರೀ ಸಹಾಯವಾಣಿ ಆರಂಭಿಸಿದೆ. ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ 2021-2026ರವರೆಗೆ ದಾಖಲಾಗಿರುವ ಸೈಬರ್ ಅಪರಾಧ ಪ್ರಕರಣಗಳು ಇಂತಿವೆ...
2021 – 8,396 ಪ್ರಕರಣಗಳು
2022 – 12,960 ಪ್ರಕರಣಗಳು
2023 – 22,255 ಪ್ರಕರಣಗಳು
2024 – 22,483 ಪ್ರಕರಣಗಳು
2025 – 14,899 ಪ್ರಕರಣಗಳು
2026 ಫೆಬ್ರವರಿವರೆಗೆ – 2,007 ಪ್ರಕರಣಗಳು
178 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ
Advertisement