

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6 ರಂದು ಮಂಡಿಸಿದ ಬಜೆಟ್ ಕುರಿತ ತಮ್ಮ ಹೇಳಿಕೆಗೆ ಸ್ವಪಕ್ಷ ನಾಯಕರ ಆಕ್ರೋಶದ ನಡುವೆಯೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಾವು ಆಡಿದ್ದ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ತಮ್ಮ ಕ್ಷೇತ್ರದ ಜನರ ಪರವಾಗಿ ಮಾತನಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಪುನರುಚ್ಚರಿಸಿದ್ದಾರೆ.
ಇತ್ತೀಚಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಇಂದು ಪ್ರತಿಕ್ರಿಯಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ, ಹುಸೇನ್ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸ್ವಪಕ್ಷೀಯರ ವಿರುದ್ಧದ ಬಜೆಟ್ ಕುರಿತ ಹೇಳಿಕೆಯನ್ನು ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್, ಬಜೆಟ್ ಸಮಾಧಾನ ತಂದಿಲ್ಲ ಮತ್ತು ತಮ್ಮ ನಂಬಿಕೆ ಹುಸಿಯಾಗಿದೆ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ನಾನು ಐಎಎಸ್ ಅಥವಾ ಕೆಎಎಸ್ ಅಧಿಕಾರಿ ಅಲ್ಲ. ಬದಲಿಗೆ ಜನರ ಮತದಿಂದ ಆಯ್ಕೆಯಾದ ಜನಪ್ರತಿನಿಧಿ. ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯವಾಗಿದೆ.
ನನ್ನ ಕ್ಷೇತ್ರವಾದ ರಾಮನಗರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಹೀಗಿರುವಾಗ ತಮ್ಮ ಕ್ಷೇತ್ರದ ಜನರ ಪರವಾಗಿ ಮಾತನಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.
ತನ್ನ ಕ್ಷೇತ್ರದ ಅಭಿವೃದ್ಧಿ ಕೆಲಸದ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಮುಖ್ಯಮಂತ್ರಿ ಸ್ಪಂದಿಸಿಲ್ಲ. ಹತ್ತು ಬಾರಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಿಎಂ ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಹಾಗಾಗಿ ನನ್ನ ಕ್ಷೇತ್ರದ ಬಗ್ಗೆ ಮಾತನಾಡಿದ್ದೇನೆ. ಇದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವುದರಲ್ಲಿ ಯಾವ ತಪ್ಪಿದೆ. ಇಡೀ ರಾಜ್ಯದ ಬಗ್ಗೆ ನಾನು ಮಾತನಾಡಿಲ್ಲ. ನನ್ನ ಕ್ಷೇತ್ರದ ಬಗ್ಗೆ ಮಾತ್ರ ಮಾತನಾಡಿದ್ದೇನೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.
ಭಕ್ಷಿಕೆರೆ ಏರಿ ಹೊಡೆದು ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಫೋಟೋ ಸಹಿತ ಮಾಹಿತಿ ನೀಡಿದ್ದೆ. ರಸ್ತೆ, ಚರಂಡಿ ಹಾಗೂ ನೀರಾವರಿ ಯೋಜನೆಗಳಿಗಾಗಿ ವಿಶೇಷ ಅನುದಾನ ನೀಡುವಂತೆ ನಾಲ್ಕೈದು ಬಾರಿ ಕೇಳಿಕೊಂಡಿದ್ದೆ. ಪಾರದರ್ಶಕವಾಗಿ ಅನುದಾನ ಸಿಗಲಿದೆ ಎಂಬ ನಂಬಿಕೆ ನನಗಿತ್ತು. ಆದರೆ ಈಗ ಆ ನಂಬಿಕೆ ಹುಸಿಯಾಗಿದೆ' ಎಂದು ನೋವು ತೋಡಿಕೊಂಡಿದ್ದಾರೆ. ಜೊತೆಗೆ, ಈ ಹಿಂದೆ ಇದ್ದ ಜನಪ್ರತಿನಿಧಿಗಳು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ಹೊಸದಾಗಿ ಆಯ್ಕೆಯಾದ ನನಗೆ ಜನರ ನಿರೀಕ್ಷೆಗಳನ್ನು ಪೂರೈಸಲು ಹೆಚ್ಚಿನ ಅನುದಾನದ ಅಗತ್ಯವಿತ್ತು. ಆದರೆ ಸಿಎಂ ಕಡೆಯಿಂದ ಸೂಕ್ತ ಸ್ಪಂದನೆ ಸಿಗದಿರುವುದು ನನಗೆ ವೈಯಕ್ತಿಕವಾಗಿ ನೋವುಂಟು ಮಾಡಿದೆ ಎಂದು ತಿಳಿಸಿದರು.
ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ವಿಚಾರದ ಬಗ್ಗೆಯೂ ಇಕ್ಬಾಲ್ ಹುಸೇನ್ ಮಾತನಾಡಿದ್ದಾರೆ. ಯುಗಾದಿ ಬಳಿಕ ರಾಜ್ಯಕ್ಕೆ ಒಂದು ಒಳ್ಳೆಯ ಸುದ್ದಿ ಸಿಗಲಿದೆ. ಡಿಕೆಶಿ ಅವರ ಶ್ರಮಕ್ಕೆ ತಕ್ಕ ರಿಸಲ್ಟ್ ಸಿಕ್ಕೇ ಸಿಗುತ್ತದೆ," ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಮುನ್ಸೂಚನೆ ನೀಡಿದ್ದಾರೆ.
ಹುಸೇನ್ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಬಜೆಟ್ನಲ್ಲಿ ಅವರ ಕ್ಷೇತ್ರದ ಬಗ್ಗೆ ಕಾಳಜಿ ವಹಿಸಲಾಗಿದೆ . ರಾಮನಗರ ಜಿಲ್ಲೆಯಲ್ಲಿ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದು, ಇತರೆ ಸೌಲಭ್ಯಗಳನ್ನೂ ಕಲ್ಪಿಸಿದ್ದೇವೆ ಎಂದು ತಿಳಿಸಿದರು.
Advertisement