

ಬೆಂಗಳೂರು: ರಾಜ್ಯ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸಚಿವರು ಹಾಗೂ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಡಾಮಂಡಲಗೊಂಡಿದ್ದು, ಸಮರ್ಪಕ ಉತ್ತರ ಒದಗಿಸದ ಕೆಲವು ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಇಲಾಖೆಗಳು ಸಮರ್ಪಕವಾಗಿ ಉತ್ತರ ನೀಡದ ಹಿನ್ನೆಲೆಯಲ್ಲಿ ಉಂಟಾದ ಗಂಭೀರ ಪರಿಸ್ಥಿತಿಗೆ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಮುಖ್ಯ ಕಾರ್ಯದರ್ಶಿಗೆ ಸಂಬಂಧಿತ ಇಲಾಖೆಗಳ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡಲು ಮತ್ತು ಅಗತ್ಯವಿದ್ದರೆ ಅಮಾನತು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ವಿಧಾನಸಭೆ ಸ್ಪೀಕರ್ ಯುಟಿ.ಖಾದರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ತಿಳಿಸಿದರು.
ಇದಕ್ಕೂ ಮುನ್ನ, ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಕೋಪಗೊಂಡ ಸಭಾಧ್ಯಕ್ಷರು ಸದನವನ್ನು ಮುಂದೂಡಿ ಹೊರನಡೆದಿದ್ದರು. ಸಚಿವರು ಮತ್ತು ಅಧಿಕಾರಿಗಳು ಸ್ಪಷ್ಟನೆ ನೀಡುವವರೆಗೆ ಸದನವನ್ನು ನಡೆಸುವುದಿಲ್ಲ ಎಂದು ಘೋಷಿಸಿದ್ದರು.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್ ಅವರು, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಆದಾಯ ಇಲಾಖೆ 91 ಪ್ರಶ್ನೆಗಳ ಪೈಕಿ ಕೇವಲ 20ಕ್ಕೆ ಮಾತ್ರ ಉತ್ತರ ನೀಡಿರುವುದು ಬೆಳಕಿಗೆ ಬಂದಿದೆ. ಇದು ವಿಧಾನಸಭೆಯ ಇತಿಹಾಸದಲ್ಲೇ ಅಪರೂಪದ ಘಟನೆಯಾಗಿದೆ. “ಭವಿಷ್ಯದಲ್ಲಿ ಇಂತಹ ಪರಿಸ್ಥಿತಿ ಬರದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ. ಶೇ.50 ಕ್ಕಿಂತ ಕಡಿಮೆ ಉತ್ತರ ನೀಡುವುದು ಸರ್ಕಾರಕ್ಕೆ ಅವಮಾನಕರ ವಿಚಾರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಏತನ್ಮಧ್ಯೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಸಭಾಧ್ಯಕ್ಷರ ಕ್ರಮವನ್ನು ಶ್ಲಾಘಿಸಿ, ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಟೀಕಿಸಿದರು.
ವಸತಿ ಇಲಾಖೆಗೆ ಸಂಬಂಧಿಸಿದ 31 ಪ್ರಶ್ನೆಗಳ ಪೈಕಿ ಕೇವಲ 4ಕ್ಕೆ ಮಾತ್ರ ಉತ್ತರ ನೀಡಲಾಗಿದೆ. ಇದು ಅಧಿಕಾರಿಗಳ ಗಂಭೀರ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.
ಈ ವಿಚಾರದಲ್ಲಿ ಅಧಿಕಾರಿಗಳು ಕೂಡ ಹೊಣೆಗಾರರು, ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು. ಸಚಿವರು ಸದನಕ್ಕೆ ಸಮಯಕ್ಕೆ ಬಾರದಿರುವುದೂ ಸಮಸ್ಯೆಗೆ ಕಾರಣವಾಗಿದೆ ಎಂದು ಹೇಳಿದರು.
ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಕೂಡ ಸಭಾಧ್ಯಕ್ಷರ ನಡೆಗೆ ಬೆಂಬಲ ನೀಡಿ, “ಸರ್ಕಾರ ಬಲಹೀನವಾಗಿರಬಹುದು, ಅಧಿಕಾರಿಗಳು ನಿರ್ಲಕ್ಷ್ಯವಾಗಿರಬಹುದು, ಆದರೆ, ಸಭಾಧ್ಯಕ್ಷರು ಸದನವನ್ನು ಬಲಹೀನವಾಗಿಡಬಾರದು ಎಂದು ಅಭಿಪ್ರಾಯಪಟ್ಟರು.
ಈ ನಡುವೆ ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕಂದಾಯ, ವಸತಿ ಮತ್ತು ಲೋಕೋಪಯೋಗಿ ಇಲಾಖೆಗಳ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಿದ್ದಾರೆಂದು ತಿಳಿದುಬಂದಿದೆ.
Advertisement