

ಬೆಂಗಳೂರು: ರಾಜ್ಯದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಗೀಳನ್ನು ನಿಯಂತ್ರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
ವಿಧಾನಸಭೆಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳ ಮೊಬೈಲ್ ಬಳಕೆಯನ್ನು ನಿಯಂತ್ರಿಸಲು ಮುಂದಿನ ಅಧಿವೇಶನದಲ್ಲಿ ವಿಶೇಷ ಮಾರ್ಗಸೂಚಿಗಳನ್ನು ರಚಿಸಿ ಸದನದಲ್ಲಿ ಮಂಡನೆ ಮಾಡಲಿದ್ದೇವೆಂದು ಹೇಳಿದರು.
ವಿರೋಧ ಪಕ್ಷದ ಸದಸ್ಯರು ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ವ್ಯಸನದ ಬಗ್ಗೆ ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಚಿಚವರು ಪ್ರತಿಕ್ರಿಯಿಸಿದರು.
ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಮೊಬೈಲ್ ಅತಿಯಾದ ಬಳಕೆ ಗಂಭೀರ ಸಮಸ್ಯೆಯಾಗಿದೆ. ಕೆಲವರು ಆತ್ಮಹತ್ಯೆ ಯತ್ನಕ್ಕೂ ಮುಂದಾಗುತ್ತಿದ್ದಾರೆ. ಹೀಗಾಗಿ, ದೇಶದಲ್ಲೇ ಮೊದಲ ಬಾರಿಗೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿದೆ” ಎಂದು ಹೇಳಿದರು.
ಇತರ ದೇಶಗಳಲ್ಲಿ ಜಾರಿಯಲ್ಲಿರುವ ನಿಯಮಗಳನ್ನು ಸರ್ಕಾರ ಅಧ್ಯಯನ ಮಾಡುತ್ತಿದ್ದು, ಅಂತಾರಾಷ್ಟ್ರೀಯ ಮಕ್ಕಳ ಸಂಘಟನೆಗಳ ಸಲಹೆಗಳನ್ನೂ ಪಡೆಯಲಿದೆ. ಈ ನಿಯಮಗಳನ್ನು ಜಾರಿಗೆ ತರುವ ಮೊದಲು ಪೋಷಕರ ಒಪ್ಪಿಗೆ ಕೂಡ ಅಗತ್ಯ ಎಂದು ತಿಳಿಸಿದರು.
ಮಕ್ಕಳಲ್ಲಿ ಮೊಬೈಲ್ ಬಳಕೆ ಸಂಪೂರ್ಣವಾಗಿ ನಿಲ್ಲಿಸುವುದು ಸಾಧ್ಯವಿಲ್ಲ. ಅವರು ಗುಪ್ತವಾಗಿ ಬಳಸುವ ಸಾಧ್ಯತೆ ಇದೆ. ಆದ್ದರಿಂದ ಕಾನೂನುಬದ್ಧ ನಿಯಂತ್ರಣ ತರಲಾಗುವುದು ಎಂದರು.
ಈಗಾಗಲೇ ಶಾಲೆಗಳಲ್ಲಿ ಮೊಬೈಲ್ ಫೋನ್ಗಳಿಗೆ ನಿಷೇಧ ಇದ್ದರೂ ಅದು ಸಮರ್ಪಕವಾಗಿ ಜಾರಿಗೆ ಬಂದಿಲ್ಲ. “ಮೊಬೈಲ್ ಉಪಯೋಗಕಾರಿ ಸಾಧನವಾದರೂ, ಮಕ್ಕಳಿಗೆ ಹಾನಿಕಾರಕ ವಿಷಯಗಳು ತಲುಪುತ್ತಿರುವುದು ಕಳವಳಕಾರಿ ವಿಚಾರವಾಗಿದೆ ಎಂದು ಹೇಳಿದರು.
Advertisement