

ಗದಗ: ಆರ್ಥಿಕ ಸಂಕಷ್ಟದ ಕಾರಣದಿಂದ ಎಸ್ಎಸ್ಎಲ್'ಸಿ ಪರೀಕ್ಷೆಯನ್ನು ಬಿಟ್ಟು ದೈನಂದಿನ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹುಡುಕಿ, ಪರೀಕ್ಷಾ ಕೇಂದ್ರಕ್ಕೆ ಕರೆತಂದು ಪರೀಕ್ಷೆ ಬರೆಯುವಂತೆ ಮಾಡಿರುವ ಘಟನೆಯೊಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬರ್ಡೂರು ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿನಿ ಪಲ್ಲವಿ ಹಳ್ಳಿಕೇರಿ, ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ವಿ.ಜೆ. ಲಿಂಬಿಕೈ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದು, ಕುಟುಂಬದ ಸಂಕಷ್ಟದ ಕಾರಣದಿಂದ ದ್ರಾಕ್ಷಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಳು. ಪರೀಕ್ಷೆಗಳು ನಡೆಯುತ್ತಿದ್ದರೂ, ಕುಟುಂಬದ ಹೊಣೆಗಾರಿಕೆಯಿಂದಾಗಿ ಕೆಲಸಕ್ಕೆ ಹೋಗುವುದು ಅನಿವಾರ್ಯವಾಗಿತ್ತು.
ಸೋಮವಾರ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದ ವೇಳೆ, ಕೆಲ ವಿದ್ಯಾರ್ಥಿಗಳು ಗೈರುಹಾಜರಾಗಿದ್ದನ್ನು ಗಮನಿಸಿದ ಅಧಿಕಾರಿಗಳು, ಅವರ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಪಲ್ಲವಿ ಪರೀಕ್ಷೆಗೆ ಬರೆಯದೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಳೆ ಎಂಬ ಮಾಹಿತಿ ಸಹಪಾಠಿಗಳಿಂದ ದೊರಕಿತ್ತು.
ತಕ್ಷಣ ಕಾರ್ಯಪ್ರವೃತ್ತರಾದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೊಲಕ್ಕೆ ತೆರಳಿ, ವಿದ್ಯಾರ್ಥಿಗೆ ಮನವರಿಕೆ ಮಾಡಿ. ಪರೀಕ್ಷೆಯ ಮಹತ್ವವನ್ನು ವಿವರಿಸಿ, ಪರೀಕ್ಷಾ ಕೇಂದ್ರಕ್ಕೆ ಕರೆತಂದು ಆಕೆ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ.
ನಾನು ಇಂದು ವಿಜ್ಞಾನ ಪರೀಕ್ಷೆ ಬರೆದಿದ್ದೇನೆ. ವೈಯಕ್ತಿಕ ಸಮಸ್ಯೆಗಳ ಕಾರಣದಿಂದ ಕೆಲಸಕ್ಕೆ ಹೋಗಬೇಕಾಯಿತು. ನನ್ನನ್ನು ಹುಡುಕಿ ಕರೆತಂದ ಅಧಿಕಾರಿಗಳಿಗೆ ನಾನು ಕೃತಜ್ಞಳಾಗಿದ್ದೇನೆಂದು ವಿದ್ಯಾರ್ಥಿನಿ ಪಲ್ಲವಿ ಹೇಳಿದ್ದಾಳೆ.
ಈ ನುವೆ ಗದಗ ಜಿಲ್ಲಾ ಶಿಕ್ಷಣಾಧಿಕಾರಿ ಆರ್. ಎಸ್. ಬುರಡಿ ಅವರು ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿಸಿದ್ದಾರೆ.
ಮುಂಡರಗಿ ಅಧಿಕಾರಿಗಳು ತಕ್ಷಣ ಕ್ರಮ ತೆಗೆದುಕೊಂಡು ವಿದ್ಯಾರ್ಥಿನಿಯನ್ನು ಪರೀಕ್ಷೆಗೆ ಕರೆತಂದಿದ್ದಾರೆ. ಇದು ಶ್ಲಾಘನೀಯ ಕೆಲಸ. ಆರ್ಥಿಕ ಸಮಸ್ಯೆಯಿಂದ ಪರೀಕ್ಷೆಗೆ ಬರಲಾಗದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಸಹಾಯ ಮಾಡುತ್ತೇವೆಂದು ತಿಳಿಸಿದ್ದಾರೆ.
Advertisement