

ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಮುಖ್ಯ ಕಾರ್ಯದರ್ಶಿ ಶಲಿನಿ ರಾಜನೀಶ್ ಶುಕ್ರವಾರ ಮಹತ್ವದ ಸಭೆ ನಡೆಸಿದರು.
ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯಕ್ಕೆ ಸಂಬಂಧಿಸಿದಂತೆ ಭದ್ರತಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಕಳೆದ ವರ್ಷದ ಸಂಭವಿಸಿದ ಕಾಲ್ತುಳಿತ ಘಟನೆಕ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಈ ಬಾರಿ ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸ್ಟೇಡಿಯಂ ಒಳಗೆ ಮತ್ತು ಸುತ್ತಮುತ್ತ ಭದ್ರತಾ ವ್ಯವಸ್ಥೆಗಳು, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳು, ವಾಹನ ಸಂಚಾರ ನಿಯಂತ್ರಣ, ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಇದಲ್ಲದೆ, ಪಂದ್ಯ ದಿನ ಉಂಟಾಗುವ ಸಂಚಾರ ದಟ್ಟಣೆ ಸಮಸ್ಯೆಗಳ ಬಗ್ಗೆ ಕೂಡ ಸಭೆಯಲ್ಲಿ ಚರ್ಚಿಸಲಾಗಿದೆ. ಮೆಟ್ರೋ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ರೈಲುಗಳ ಸಂಚಾರ ವೇಳಾಪಟ್ಟಿ, ಮೆಟ್ರೋ ನಿಲ್ದಾಣಗಳಲ್ಲಿ ಭದ್ರತೆ ಸೇರಿದಂತೆ ಹಲವು ಅಂಶಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಶಾಲಿನಿ ರಾಜನೀಶ್ ಅಧಿಕಾರಿಗಳಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ, ಎಲ್ಲೆಡೆ ಹೈ ಅಲರ್ಟ್ನಲ್ಲಿ ಇರಬೇಕು ಎಂದು ಸೂಚಿಸಿದ್ದಾರೆ. ಸಣ್ಣ ತಪ್ಪು ಕೂಡ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಭೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಪದಾಧಿಕಾರಿಗಳು, RCB ಪ್ರತಿನಿಧಿಗಳು, ನಗರ ಪೊಲೀಸ್ ಆಯುಕ್ತರು, ಜಿಬಿಎ ಮುಖ್ಯ ಆಯುಕ್ತರು ಹಾಗೂ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Advertisement