

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ವಸ್ತ್ರಸಂಹಿತೆಯಿಂದ ಸಮಸ್ಯೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್ ತಿಳಿಸಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.
ಜನಿವಾರ ಹಾಗೂ ಹಿಜಾಬ್ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಆಗಿತ್ತು. ಆದ್ದರಿಂದ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಮನವಿ ಮಾಡಿದ್ದರು. ಹೀಗಾಗಿ ತೊಂದರೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮಾತ್ರ ಅನ್ವಯ ಆಗುವಂತೆ ಮರುಪರೀಕ್ಷೆ ನಡೆಸುತ್ತೇವೆ ಹೇಳಿದರು.
ಗ್ರೇಸ್ ಅಂಕ ಇಲ್ಲ
ಪರೀಕ್ಷೆ ಗೊಂದಲಕ್ಕೆ ಒಳಗಾದ ಪರೀಕ್ಷಾರ್ಥಿಗಳಿಗೆ ಗ್ರೇಸ್ ಅಂಕ ನೀಡುವುದು ಸರಿಕಾಣುವುದಿಲ್ಲ. ಹಾಗಾಗಿ ಮರು ಪರೀಕ್ಷೆ ಮಾಡುತ್ತೇವೆ, ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕಳೆದ ಬಾರಿ ಕೂಡ ಗೊಂದಲ ಆಗಿತ್ತು. ಈ ಬಾರಿ ಮರು ಪರೀಕ್ಷೆ ಮಾಡುವುದು ಸೂಕ್ತ ಎಂದು ನಿರ್ಧಾರ ಮಾಡಲಾಗಿದೆ ಎಂದರು.
Advertisement