

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್ಆರ್ಇಜಿಎ) ರದ್ದುಪಡಿಸಿ ಜಾರಿಗೆ ತಂದಿರುವ ‘ವಿಕಸಿತ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)’ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಕೇಂದ್ರ ಸರ್ಕಾರ ಮನ್ರೇಗಾಗೆ ಬದಲಾಗಿ VB-G RAM-G ಕಾಯ್ದೆ ಜಾರಿಗೊಳಿಸಿರುವುದಕ್ಕೆ ರಾಜ್ಯ ಸರ್ಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿ, ಎಂಎನ್ಆರ್ಇಜಿಎ ಪುನರ್ ಸ್ಥಾಪನೆಗೆ ಆಗ್ರಹಿಸಿತ್ತು.
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು, “ಕೇಂದ್ರ ಸರ್ಕಾರ ಇನ್ನೂ ಹೊಸ ಯೋಜನೆ ಜಾರಿಗೆ ಸಂಬಂಧಿಸಿದ ಅಧಿಸೂಚನೆ ಅಥವಾ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿಲ್ಲ. ಹೀಗಾಗಿ ಜನರ ಹಿತದೃಷ್ಟಿಯಿಂದ ಸುಪ್ರೀಂ ಕೋರ್ಟ್ ಮೊರೆ ಹೋಗುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಪ್ರಸ್ತುತ ಹಣಕಾಸು ವರ್ಷಕ್ಕೆ ಕಾರ್ಯಯೋಜನೆ ರೂಪಿಸಿ ಮನ್ರೇಗಾ ಜಾರಿಗೆ ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗುವುದು. ಮನ್ರೇಗಾ ಪುನರ್ ಸ್ಥಾಪನೆಗೂ ನಾವು ಆಗ್ರಹಿಸಲಾಗುವುದು ಎಂದು ತಿಳಿಸಿದರು.
ಕೇಂದ್ರ ಸರ್ಕಾರ ರಾಜ್ಯದ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಂಡಿದ್ದು, ಇದರ ಪರಿಣಾಮ ಕೃಷಿ ಕಾರ್ಮಿಕರ ಮೇಲೆ ದುಷ್ಪರಿಣಾಮ ಬೀರಿದೆ ಎಂದೂ ಇದೇ ವೇಳೆ ಆರೋಪಿಸಿದರು.
ಸಚಿವ ಸಂಪುಟದ ಇತರೆ ಪ್ರಮುಖ ತೀರ್ಮಾನಗಳು:
ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ 22 ಕೋಟಿ ರೂ. ವೆಚ್ಚದ ಡಿಜಿಟಲ್ ಪ್ಲಾನೆಟೇರಿಯಂ
ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ 66 ಕೋಟಿ ರೂ. ವೆಚ್ಚದ ನಾಲ್ಕು ಮಾರ್ಗ ರಸ್ತೆ ಅಭಿವೃದ್ಧಿ
ಟ್ಯಾಕ್ಸಿ ಹಾಗೂ ಆಟೋ ಚಾಲಕರ ಕಲ್ಯಾಣಕ್ಕಾಗಿ ಪ್ರತ್ಯೇಕ ಮಂಡಳಿ ರಚನೆಗೆ ಅನುಮತಿ
ಬೆಂಗಳೂರು ಬನ್ನೇರುಘಟ್ಟ ಜೈವಿಕ ಉದ್ಯಾನ ಮತ್ತು ಮೈಸೂರು ಮೃಗಾಲಯದಲ್ಲಿ ಡಿಜಿಟಲ್ ಜೂ ಗೈಡ್ ಯೋಜನೆ
ಬನ್ನೇರುಘಟ್ಟದಲ್ಲಿ 144.40 ಕೋಟಿ ರೂ. ವೆಚ್ಚದ ಅಕ್ವೇರಿಯಂ ಯೋಜನೆ
ಮೈಸೂರು ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲು ಅನುಮೋದನೆ
ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿಗೆ 23.76 ಕೋಟಿ ರೂ.
ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾಸ್ಟರ್ ಪ್ಲಾನ್ ಮೂರನೇ ಹಂತಕ್ಕೆ 604.65 ಕೋಟಿ ರೂ.
ಕಲಬುರಗಿ ಮತ್ತು ಯಾದಗಿರಿಯಲ್ಲಿ ಮೂರು ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ
ಕ್ರೀಡಾ ಸಾಧಕರಿಗೆ ಸರ್ಕಾರಿ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ
ರಾಯಚೂರು ಜಿಲ್ಲೆಯ ಹುಟ್ಟಿ ಗೋಲ್ಡ್ ಮೈನ್ಸ್ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗೆ 132.50 ಕೋಟಿ ರೂ. ಮಂಜೂರು.
Advertisement