

ದೊಡ್ಡಬಳ್ಳಾಪುರ: ಅಹಿಂದ ಹೆಸರಲ್ಲಿ ವೋಟ್ ಪಡೆದ ಕಾಂಗ್ರೆಸ್ ಸರ್ಕಾರ ಅಹಿಂದ ಹಣವನ್ನೇ ಲೂಟಿ ಮಾಡುತ್ತಿದೆ. ಕಳೆದ 3 ವರ್ಷಗಳಲ್ಲಿ ಸುಮಾರು ₹53,000 ಕೋಟಿಗೂ ಅಧಿಕ ಪರಿಶಿಷ್ಟ ಜಾತಿ-ಪಂಗಡದ SCP/TSP ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜಿಲ್ಲಾ-ತಾಲ್ಲೂಕು ಜೆಡಿಎಸ್ ವತಿಯಿಂದ ಆಯೋಜಿಸಿದ್ದ ಜನರೊಂದಿಗೆ ಜೆಡಿಎಸ್ 25ರ ಸಂಭ್ರಮ ಸಮಾರಂಭದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಈ ವರ್ಷದ ಬಜೆಟ್ನಲ್ಲಿ ₹15,000 ಕೋಟಿ ರೂಪಾಯಿಗಳನ್ನು ಸಮುದಾಯದ ಅಭಿವೃದ್ಧಿ ಕೆಲಸಗಳಿಂದ ಕಡಿತಗೊಳಿಸಲಾಗಿದೆ ಎಂದು ದೂರಿದರು.
ದಕ್ಷಿಣ ಭಾರತದ ಚುನಾವಣಾ ಫಲಿತಾಂಶ ಗಮನಿಸಿದರೆ ಉತ್ತಮ ಆಡಳಿತಗಾರರನ್ನು ಆಯ್ಕೆ ಮಾಡುವ ಶಕ್ತಿ ಯುವ ಸಮುದಾಯಕ್ಕೆ ಇದೆ. ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಚಿನ್ನದಂತಹ ಕಾರ್ಯಕರ್ತರಿದ್ದರೂ ಮುಖಂಡರ ವೈಮನಸ್ಸಿಂದಲೇ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ. ಇದು ಇಂದಿಗೇ ಮುಕ್ತಾಯವಾಗಬೇಕು. 2028ರ ವಿಧಾನಸಭಾ ಚುನಾವಣೆಯಲ್ಲಿ NDA ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಶತಸಿದ್ಧ. ಈಗಿನಿಂದಲೇ ಎಲ್ಲರೂ ಒಗ್ಗಟ್ಟಿನಿಂದ ನಡೆದರೆ ಮಾತ್ರ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದುಳಿದವರ ಪರ ಎಂದು ಬಿಂಬಿಸಿಕೊಳ್ಳುತ್ತಿದೆ. ಆದರೆ 3 ವರ್ಷಗಳಲ್ಲಿ ಅಹಿಂದ ವರ್ಗದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಸಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ. ಮಹಿಳೆಯರಿಗೆ ₹2 ಸಾವಿರ ಗೃಹಲಕ್ಷ್ಮೀ ಕೊಟ್ಟ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಖಂಡಿಸಿದರು.
ವಿದ್ಯಾವಂತ ಯುವ ಸಮುದಾಯಕ್ಕೆ ಉದ್ಯೋಗ ದೊರೆಯುತ್ತಿಲ್ಲ. ಸರ್ಕಾರ ಕಾಟಾಚಾರಕ್ಕೆ ಉದ್ಯೋಗ ಮೇಳ ನಡೆಸಿ ವಂಚಿಸುತ್ತಿದೆ. ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ಕಿತ್ತು ಹಾಕದೇ ಇದ್ದರೆ ಯುವ ಸಮುದಾಯಕ್ಕೆ ಉದ್ಯೋಗ ದೊರೆಯಲು ಸಾಧ್ಯವೇ ಇಲ್ಲ ಎಂದು ಆರೋಪಿಸಿದರು.
KIADB ಯಿಂದ ದೊಡ್ಡಬಳ್ಳಾಪುರ ರೈತರಿಗೆ ಆಗುತ್ತಿರುವ ಅನ್ಯಾಯದ ಕುರಿತು ಮನವಿ ಸ್ವೀಕರಿಸಿದ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಶೀಘ್ರ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನೂತನ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ ಮೂಲಕ ಪಕ್ಷಕ್ಕೆ ಹೊಸ ಚೈತನ್ಯ ತುಂಬಲಾಗುತ್ತಿದೆ. ಜಿಲ್ಲೆ-ತಾಲ್ಲೂಕು ಅಧ್ಯಕ್ಷರ ಆಯ್ಕೆ ಸಾಮೂಹಿಕ ತೀರ್ಮಾನದಿಂದಲೇ ಆಗಿದೆ. ಒಡಕು ಮೂಡಿ ಕಾರ್ಯಕರ್ತರು, ಮತದಾರರಿಗೆ ಮೋಸವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
Advertisement