

ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಹಿರಿಯ ಕಾಂಗ್ರೆಸ್ ಶಾಸಕ ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೂರು ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಿದೆ. ಇದರ ಜೊತೆಗೆ, ಸುಧಾಕರ್ ಅವರ ಸ್ಮರಣಾರ್ಥ ರಾಜ್ಯದ ಒಂದು ಪ್ರಮುಖ ನೀರಾವರಿ ಯೋಜನೆಗೆ ಅವರ ಹೆಸರನ್ನು ನಾಮಕರಣ ಮಾಡುವುದಾಗಿ ಘೋಷಣೆ ಮಾಡಿದೆ.
ನೀರಾವರಿ ಖಾತೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಈ ಕುರಿತು ಘೋಷಣೆ ಮಾಡಿದ್ದಾರೆ.
ಸುಧಾಕರ್ ಅವರು ಭದ್ರಾ ಮೇಲ್ದಂಡೆ ಯೋಜನೆಗಾಗಿ ಅಪಾರ ಹೋರಾಟ ನಡೆಸಿದ್ದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ಉದ್ಘಾಟನೆ ಮಾಡುವ ದೊಡ್ಡ ಆಸೆ ಅವರಿಗೆ ಇತ್ತು. ಈ ಯೋಜನೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದರು. ಯೋಜನೆಯ ಉದ್ಘಾಟನೆಯನ್ನು ಅವರ ಅಧ್ಯಕ್ಷತೆಯಲ್ಲಿ ನಡೆಸಬೇಕೆಂದು ಯೋಚಿಸಿದ್ದೆವು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ಸುಧಾಕರ್ ನನ್ನ ಆಪ್ತ ಸ್ನೇಹಿತ ಹಾಗೂ ಸಂಪುಟದ ಸಹೋದ್ಯೋಗಿಯಾಗಿದ್ದರು. ಪಕ್ಷದ ಸದಸ್ಯತ್ವ ಅಭಿಯಾನದಲ್ಲಿ ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಕೀರ್ತಿ ಅವರದ್ದು. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ವೇಳೆ ಮಳೆ ನಡುವೆಯೂ ಅವರು ಹಾಗೂ ಅವರ ಕಾರ್ಯಕರ್ತರು ಅನುಭವಿಸಿದ ಕಷ್ಟವನ್ನು ಮರೆಯಲು ಸಾಧ್ಯವಿಲ್ಲ ಎಂದು ಭಾವುಕರಾದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸುಧಾಕರ್ ಅವರಿಗೆ ಅಂತಿಮ ನಮನ ಸಲ್ಲಿಸಿ, ಸಹಕಾರ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಸೋಮವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
ಸುಧಾಕರ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಹಿರಿಯೂರಿನಲ್ಲಿ ಇರಿಸಲಾಗಿದೆ. ಎಂದು ಹೇಳಿದರು.
ಈ ನಡುವೆ ರಾಜಕೀಯ ವಲಯದ ಅನೇಕ ನಾಯಕರು ಸುಧಾಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ, ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನೂ ಮುಂದೂಡಲಾಗಿದೆ.
Advertisement