

ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗಳಿಗೆ ಭಾರೀ ಹಾನಿಯಾಗಿದ್ದು, ಹಲವು ಮನೆಗಳಿಗೂ ಹಾನಿ ಉಂಟಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಮಾಹಿತಿ ನೀಡಿದ್ದು, ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚು ಇರದಿದ್ದರೂ ಹಾನಿಯ ಪ್ರಮಾಣ ಮಾತ್ರ ಗಂಭೀರವಾಗಿದೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ 2.6 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ಬಾರಿ 6.8 ಮಿಮೀ ಮಳೆಯಾಗಿದೆ ಎಂದು ಹೇಳಿದ್ದಾರೆ.
ಚನ್ನಗಿರಿ – 3.7 ಮಿಮೀ ಬದಲು 6.1 ಮಿಮೀ, ದಾವಣಗೆರೆ – 1.9 ಮಿಮೀ ಬದಲು 7.1 ಮಿಮೀ, ಹರಿಹರ – 1.0 ಮಿಮೀ ಬದಲು 12.3 ಮಿಮೀ, ಹೊನ್ನಾಳಿ – 3.3 ಮಿಮೀ ಬದಲು 9.5 ಮಿಮೀ, ಜಗಳೂರು – 1.4 ಮಿಮೀ ಬದಲು 3.9 ಮಿಮೀ, ನ್ಯಾಮತಿ – 3.0 ಮಿಮೀ ಬದಲು 5.0 ಮಿಮೀ ಮಳೆಯಾಗಿದೆ ಎಂದು ತಿಳಿಸಿದ್ದಾರೆ.
ಹರಿಹರ ತಾಲೂಕಿನ 79 ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಸಂಪೂರ್ಣ ಹಾನಿಗೊಳಗಾಗಿದೆ. ಕೊಯ್ಲಿಗೆ ಸಿದ್ಧವಾಗಿದ್ದ ಬೆಳೆ ನಾಶವಾಗಿದ್ದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ.
ಇದೇ ವೇಳೆ ಚನ್ನಗಿರಿ ತಾಲೂಕಿನಲ್ಲಿ 7 ಮನೆಗಳಿಗೆ ಹಾನಿಯಾಗಿದ್ದು, ಹರಿಹರದಲ್ಲಿ ಒಂದು ಮನೆ ಹಾಗೂ ಮೂರು ಮನೆಗಳು ಮಳೆಯಿಂದ ಹಾನಿಗೊಳಗಾಗಿವೆ.
ಪ್ರಾಥಮಿಕ ಅಂದಾಜಿನ ಪ್ರಕಾರ ಒಟ್ಟು ರೂ.16.80 ಲಕ್ಷ ನಷ್ಟ ದಾಖಲಾಗಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
ಹವಾಮಾನ ಇಲಾಖೆ ವರದಿ ಪ್ರಕಾರ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದ್ದು, ಇದರಿಂದ ರೈತರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ.
Advertisement