

ಇನ್ನು ಮುಂದೆ ಲಂಚವಿಲ್ಲದೇ ಬಿ ಖಾತಾದಿಂದ ಎ ಖಾತಾ ಪರಿವರ್ತನೆ, ಮನೆ ಬಾಗಿಲಿಗೆ ಇ-ಖಾತೆ ಸೌಲಭ್ಯ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗಾರಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
"ನನ್ನ ಇ-ಖಾತಾ, ನನ್ನ ಹಕ್ಕು" ಅಭಿಯಾನದಿಂದ ಬೆಂಗಳೂರಿನ ಸಾರ್ವಜನಿಕರು ಒಂದೇ ಒಂದು ರೂಪಾಯಿ ಲಂಚ ನೀಡದೆ ತಮ್ಮ ಆಸ್ತಿಗಳನ್ನು 'ಬಿ' ಖಾತೆಯಿಂದ 'ಎ' ಖಾತೆಗೆ ಪರಿವರ್ತನೆ ಹಾಗೂ ಮನೆ ಬಾಗಿಲಲ್ಲೇ ಇ-ಖಾತೆ ಪಡೆಯಬಹುದು. ಏಳು ಲಕ್ಷ ಜನರಿಗೆ ಇದರಿಂದ ಉಪಯೋಗವಾಗಲಿದೆ. ಬೆಂಗಳೂರು ನಿವಾಸಿಗಳು, ಅರ್ಜಿದಾರರು ಈ ಅಭಿಯಾನದಿಂದ ಖುಷಿಯಾಗಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಆರಂಭವಾದ "ನನ್ನ ಇ-ಖಾತಾ, ನನ್ನ ಹಕ್ಕು" ಅಭಿಯಾನ ಕೇಂದ್ರಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿ, ಪ್ರಕ್ರಿಯೆಯನ್ನು ಪರಿಶೀಲಿಸಿದರು.
ನಂತರ ನಾಗರಿಕರ ಅಹವಾಲು ಆಲಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಖಾತೆ ದಾಖಲೆಯಲ್ಲಿ ಫೋಟೋ ಸಹ ಇರಲಿದೆ. ಯಾರಾದರೂ ನಕಲಿ ದಾಖಲೆಗಳನ್ನು ನೀಡಿ ಖಾತೆ ಮಾಡಿಸಿಕೊಂಡರೆ ಅದನ್ನು ರದ್ದು ಮಾಡುವ ವ್ಯವಸ್ಥೆಯೂ ಇದೆ.
ನಿಗದಿತ ನಂಬರ್ ನೀಡಿದ ತಕ್ಷಣ 2004 ರ ನಂತರದ ಎಲ್ಲಾ ದಾಖಲೆಗಳು ದೊರೆಯುತ್ತವೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಲಿಂಕ್ ಮಾಡಲಾಗಿದೆ. ಅರ್ಹ ಮಾಲೀಕರಿಗೆ ಖಾತೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಪ್ರತಿ ಶನಿವಾರ ನನ್ನ ಇ- ಖಾತೆ ಅಭಿಯಾನ ನಿಮ್ಮ ಆಸ್ತಿ ಮೌಲ್ಯಗಳನ್ನು ಹೆಚ್ಚಳ ಮಾಡಲು ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆ ಮಾಡಿಕೊಡಲಾಗುತ್ತಿದೆ. ಇದು ಐತಿಹಾಸಿಕ ತೀರ್ಮಾನ. ಇದರಿಂದ ನೀವು ಬ್ಯಾಂಕ್ ನಲ್ಲಿ ಸಾಲ ಪಡೆಯಬಹುದು ಹಾಗೂ ಇತರೇ ಸೌಲಭ್ಯಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಬೆಂಗಳೂರಿನಲ್ಲಿರುವ 23 ಲಕ್ಷ ಆಸ್ತಿಗಳಲ್ಲಿ 16 ಲಕ್ಷ ಎ ಖಾತೆಗಳಿದ್ದರೆ 7 ಲಕ್ಷ ಬಿ ಖಾತೆಗಳಿವೆ. ಕೆಳ ಮಟ್ಟದ ಅಧಿಕಾರಿಗಳು ಖಾತೆ ವಿಚಾರವಾಗಿ ಲಂಚ ಪಡೆದು ಕಿರುಕುಳ ನೀಡುತ್ತಿದ್ದರು ಎನ್ನುವುದು ನನ್ನ ಗಮನಕ್ಕೆ ಬಂದಿತ್ತು. ಅದಕ್ಕಾಗಿ ಪ್ರತಿ ಶನಿವಾರ ಅಭಿಯಾನ ನಡೆಯಲಿದೆ ಎಂದು ಹೇಳಿದರು.
Advertisement