

ಬೆಂಗಳೂರು: ಮದುವೆಗಾಗಿ ಒತ್ತಾಯಿಸುತ್ತಿದ್ದ ಪ್ರೇಯಸಿಯನ್ನು ಕೊಲೆ ಮಾಡಿ, ಶವವನ್ನು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ತಿರುಪಾಳ್ಯ ಕೆರೆಯಲ್ಲಿ ಎಸೆದ ಆರೋಪದ ಮೇರೆಗೆ ಅಸ್ಸಾಂ ಮೂಲದ ಯುವಕನನ್ನು ನಗರದ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತನನ್ನು ಅಸ್ಸಾಂ ಮೂಲದ 27 ವರ್ಷದ ರತನ್ ದಾಸ್ ಎಂದು ಗುರುತಿಸಲಾಗಿದೆ. ಮೃತ ಮಹಿಳೆ 47 ವರ್ಷದವರು ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 9ರಂದು ಅನೇಕಲ್ ತಾಲೂಕಿನ ತಿರುಪಾಳ್ಯ ಕೆರೆಯಲ್ಲಿ ಮಹಿಳೆಯ ಶವ ತೇಲುತ್ತಿರುವುದು ಕಂಡುಬಂದ ನಂತರ ನ ಪ್ರಕರಣ ದಾಖಲಾಗಿತ್ತು.
ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮಹಿಳೆಯನ್ನು ಉಸಿರುಗಟ್ಟಿಸಿ ಹಾಗೂ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿತ್ತು. ಇದರಿಂದ ಪೊಲೀಸರು ಸ್ವಯಂಪ್ರೇರಿತವಾಗಿ ಕೊಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ಇದೀಗ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯ ಗುರುತು ಪತ್ತೆ ಹಚ್ಚಿ, ಮೇ 14ರಂದು ತಿರುಪಾಳ್ಯದಲ್ಲಿರುವ ಆತನ ವಾಸಸ್ಥಳದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಚಾರಣೆಯಲ್ಲಿ ಆರೋಪಿ ಹಾಗೂ ಮೃತ ಮಹಿಳೆ ನಡುವೆ ಅಕ್ರಮ ಸಂಬಂಧವಿದ್ದು, ಮದುವೆಗಾಗಿ ಮಹಿಳೆ ಪದೇಪದೆ ಒತ್ತಾಯಿಸುತ್ತಿದ್ದುದರಿಂದ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎಂದು ಒಪ್ಪಿಕೊಂಡಿದ್ದಾನೆ.
ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ನಂತರ ಆಕೆಯ ಶವವನ್ನು ಕೆರೆ ಮಧ್ಯದಲ್ಲಿರುವ ಗಿಡಗಂಟಿಗಳ ನಡುವೆ ಎಸೆದಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಮೇ 15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement