

ಬೆಂಗಳೂರು: ರಾಜ್ಯದಲ್ಲಿ "ದ್ವೇಷ ಭಾಷಣ"ವನ್ನು ನಿಗ್ರಹಿಸುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು(ತಡೆಗಟ್ಟುವಿಕೆ) ಮಸೂದೆ, 2025 ಅನ್ನು ರಾಜ್ಯ ಸರ್ಕಾರ ಈಗಾಗಲೇ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಿ ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಿದೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇದಕ್ಕೆ ಇನ್ನೂ ಸಹಿ ಹಾಕಿಲ್ಲ.
ರಾಜ್ಯಪಾಲರು ಥಾವರ್ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಲು ನಿರಾಕರಿಸಿದ ನಂತರ, ಕರ್ನಾಟಕ ಸರ್ಕಾರವು ಫೆಬ್ರವರಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಮಸೂದೆಯನ್ನು ಗೃಹ ಸಚಿವಾಲಯಕ್ಕೆ ಕಳುಹಿಸಿದೆ.
ಇದೀಗ ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕಿದ್ದು, ಈ ಹಂತದಲ್ಲಿ ಮಸೂದೆ ಅಗತ್ಯವಿಲ್ಲ ಮತ್ತು ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟು ಈ ಸಮಸ್ಯೆಯನ್ನು ಪರಿಹರಿಸಲು ಸಮರ್ಪಕವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರ ಗೃಹ ಸಚಿವಾಲಯ, ಇಂಥದ್ದೊಂದು ಮಸೂದೆಯ ಅಗತ್ಯ ಇದೆಯೇ? ಎಂದು ಪ್ರಶ್ನಿಸಿದೆ.
ಬಿಜೆಪಿ ಮತ್ತು ಜೆಡಿ(ಎಸ್)ನ ತೀವ್ರ ವಿರೋಧದ ಹೊರತಾಗಿಯೂ, ಕಳೆದ ವರ್ಷ ಡಿಸೆಂಬರ್ 19 ರಂದು ಮುಕ್ತಾಯಗೊಂಡ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ವಿಧಾನಮಂಡಲದ ಎರಡೂ ಸದನಗಳು ಈ ಮಸೂದೆಯನ್ನು ಅಂಗೀಕರಿಸಲಾಗಿದೆ.
"ಈ ವಿಷಯವನ್ನು ಸಿಎಸ್ ವಿಭಾಗದಲ್ಲಿ ಪರಿಶೀಲಿಸಲಾಗಿದೆ. ಈ ನಿಟ್ಟಿನಲ್ಲಿ, ಪರಿಹರಿಸಬೇಕಾದ ಸಮಸ್ಯೆಗಳು ಈಗಾಗಲೇ ಭಾರತೀಯ ನ್ಯಾಯ ಸಂಹಿತಾ, 2023 ಮತ್ತು ಇತರ ಚಾಲ್ತಿಯಲ್ಲಿರುವ ಕಾನೂನುಗಳ ಅಡಿಯಲ್ಲಿ ಗಣನೀಯವಾಗಿ ಸೇರಿಕೊಂಡಿವೆ. ಹೀಗಿರುವಾಗ ರಾಜ್ಯ ಸರ್ಕಾರವು ಪ್ರತ್ಯೇಕ ಕಾನೂನು ಜಾರಿಗೆ ತರುವುದರಿಂದ ನಕಲು ಮತ್ತು ಏಕರೂಪತೆಯ ಕೊರತೆ ಉಂಟಾಗಬಹುದು" ಎಂದು ಗೃಹ ಸಚಿವಾಲಯ (ಸಿಎಸ್ ವಿಭಾಗ) ಪತ್ರದಲ್ಲಿ ತಿಳಿಸಿದೆ.
"ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಈ ಹಂತದಲ್ಲಿ ಪ್ರಸ್ತಾವಿತ ಮಸೂದೆಯ ಅಗತ್ಯವಿಲ್ಲದಿರಬಹುದು ಮತ್ತು ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟು ಸಮಸ್ಯೆಗಳನ್ನು ಪರಿಹರಿಸಲು ಸಾಕಾಗುತ್ತದೆ" ಎಂದು ಕೇಂದ್ರ ಹೇಳಿದೆ.
ಕರ್ನಾಟಕ ಸಂಸದೀಯ ವ್ಯವಹಾರಗಳು ಮತ್ತು ಶಾಸನ ಇಲಾಖೆಯ ಕಾರ್ಯದರ್ಶಿಗೆ ಮೇ 20 ರಂದು ಪತ್ರ ಬರೆದಿರುವ ಕೇಂದ್ರ ಗೃಹ ಸಚಿವಾಲಯದ ಕಾನೂನು ವಿಭಾಗ, ಈ ಮಸೂದೆಯ ಕುರಿತು ಮುಂದಿನ ಕ್ರಮ ಕೈಗೊಳ್ಳಲು ಸ್ಪಷ್ಟೀಕರಣವನ್ನು ನೀಡುವಂತೆ ಸೂಚಿಸಿದೆ.
ಈ ಮಸೂದೆಯು 1 ಲಕ್ಷ ರೂಪಾಯಿಗಳವರೆಗೆ ದಂಡ ಮತ್ತು ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲು ಅವಕಾಶ ನೀಡುತ್ತದೆ.
Advertisement