

ಬೆಂಗಳೂರು: ಮತ್ತೊಂದು ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ತಮ್ಮ ಅಧಿಕಾರವಧಿಯ ಕೊನೆ ಕ್ಷಣದಲ್ಲಿ ಜಾತಿಗಣತಿ ಎಂದು ಕರೆಯಲಾಗುವ 'ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ' ವರದಿಯನ್ನು ಸ್ವೀಕರಿಸಿದರು.
ಇಂದು ಸಂಜೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯ್ಕ್ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದರು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯೋಗದ ಸದಸ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ನಾಯಕ್, ವರದಿ ಸಲ್ಲಿಕೆಗೂ ರಾಜ್ಯದ ರಾಜಕೀಯ ಬೆಳವಣಿಗೆಗೂ ಯಾವುದೇ ಸಂಬಂಧವಿಲ್ಲ. ಏಕೆಂದರೆ ಈಗಾಗಲೇ ನಾವು ವರದಿಯನ್ನು ಸಲ್ಲಿಸಲು ನಿರ್ಧರಿಸಿದ್ದೇವು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ತಾವು ಅಧಿಕಾರದಿಂದ ನಿರ್ಗಮಿಸುವ ಮುನ್ನ ತಮ್ಮ ಮಹತ್ವಾಕಾಂಕ್ಷೆಯ ಜಾತಿಗಣತಿ ವರದಿಯನ್ನು ಸ್ವೀಕರಿಸಿದ್ದಾರೆ.
"ನಾವು ಸಮೀಕ್ಷೆಯನ್ನು ವಿಶ್ಲೇಷಿಸಿ ತಜ್ಞರ ಸಹಾಯದಿಂದ ವರದಿಯನ್ನು ಸಿದ್ಧಪಡಿಸುತ್ತಿದ್ದೇವೆ. ವರದಿಯು ಸುಮಾರು ಒಂದು ತಿಂಗಳ ಹಿಂದೆಯೇ ಸಿದ್ಧವಾಗಿತ್ತು. ಆದರೆ ನಾನು ಅದನ್ನು ಇಂಗ್ಲಿಷ್ನಲ್ಲಿ ಸಿದ್ಧಪಡಿಸಿದ್ದೆ. ಸರ್ಕಾರದ ಅಧಿಕೃತ ಭಾಷೆ ಕನ್ನಡವಾಗಿರುವುದರಿಂದ, ಅದನ್ನು ಅನುವಾದಿಸಬೇಕಾಗಿತ್ತು. ಅದಕ್ಕೆ ಸಮಯ ಹಿಡಿಯಿತು" ಎಂದು ಆಯೋಗದ ಅಧ್ಯಕ್ಷರು ಹೇಳಿದ್ದಾರೆ.
Advertisement