

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಲಿದ್ದಾರೆ ಎಂಬ ಮಾತುಗಳ ನಡುವೆಯೇ ಇತ್ತ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಹತ್ವದ ಸಭೆ ನಡೆಸಿದೆ.
ಹೌದು.. ರಾಜ್ಯ ಸರ್ಕಾರಕ್ಕೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಸಲ್ಲಿಕೆ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬುಧವಾರ ಸಭೆ ನಡೆಸಿತು ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ರಾಜಕೀಯ ವಲಯದಲ್ಲಿ ಭಾರೀ ಊಹಾಪೋಹಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲೇ ಈ ಬೆಳವಣಿಗೆ ನಡೆದಿದೆ.
ಊಹಾಪೋಹಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಕೆಲವೇ ದಿನಗಳಲ್ಲಿ ರಾಜೀನಾಮೆ ನೀಡಿ, ತಮ್ಮ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯದ ಆಡಳಿತದ ಹೊಣೆ ಹಸ್ತಾಂತರಿಸಬಹುದು ಎನ್ನಲಾಗಿದೆ.
ಇದೇ ಕಾರಣದಿಂದಾಗಿ ಮುಂದಿನ ಮೂರುರಿಂದ ನಾಲ್ಕು ದಿನಗಳಲ್ಲಿ ನಡೆಯಬೇಕಿದ್ದ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ಸಭೆಯನ್ನು ಬುಧವಾರವೇ ಕರೆಯಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಆಯೋಗ ನಡೆಸಿದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯು ರಾಜ್ಯದ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ನೀತಿಗಳ ಮೇಲೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ.
ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರನ್ನು ಒಳಗೊಂಡ ‘ಅಹಿಂದ’ ರಾಜಕೀಯದ ಸುತ್ತಲೇ ಸಿದ್ದರಾಮಯ್ಯ ಅವರ ರಾಜಕೀಯ ನಡೆದುಕೊಂಡಿರುವುದರಿಂದ ಈ ವರದಿ ಅತ್ಯಂತ ಮಹತ್ವದ್ದಾಗಿದೆ.
ಮುಖ್ಯಮಂತ್ರಿಗಳು ಆಯೋಗದ ವರದಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
Advertisement