

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪತನವಾಗಲಿದೆ ಎಂದು ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದ್ದಾರೆ.
ಸಿದ್ದರಾಮಯ್ಯರ ಆರ್ಥಿಕ ಶಿಸ್ತಿನಿಂದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಸಮಸ್ಯೆಯಾಗಿರಲಿಲ್ಲ. ಆದರೆ ಇನ್ನು ಮುಂದೆ ಯಾವುದೇ ಗ್ಯಾರಂಟಿ ಯೋಜನೆ ಮುಂದುವರೆಯುವುದಿಲ್ಲ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಕಣ್ಣೀರು 228ರಲ್ಲಿ ಜ್ವಾಲಾಮುಖಿಯಾಗಿ ಸ್ಫೋಟಿಸಲಿದೆ. ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲುವುದಕ್ಕೆ ಆಗುವುದಿಲ್ಲ. ಇನ್ನು ಮುಂದೆ ಪರಿಸ್ಥಿತಿ ಹದಗೆಡಲಿದೆ ಎಂದು ಅವರು ಹೇಳಿದ್ದಾರೆ.
ಮಾಸ್ ಲೀಡರ್ ಒಬ್ಬರನ್ನು ಅಧಿಕಾರದಿಂದ ಕಿತ್ತೊಗೆಯುವುದನ್ನು ಜನ ಸಹಿಸುವುದಿಲ್ಲ .ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ ಪರಿಣಾಮವಾಗಿ ಬಿಜೆಪಿ ಈಗಲೂ ಎದುರಿಸುತ್ತಿದೆ. ಮುಂದೆ ಕಾಂಗ್ರೆಸ್ ಗೂ ಇದೇ ಪರಿಸ್ಥಿತಿ ಬರಲಿದೆ ಎಂದಿದ್ದಾರೆ.
ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲು ಅಹಿಂದ ಮತಗಳೇ ಕಾರಣ. ಈಗ ಅಹಿಂದ ನಾಯಕನನ್ನೇ ತುಳಿದಿದ್ದಾರೆ. ಕುರುಬ ಸಮಾಜ ಯಾವತ್ತೂ ಇದನ್ನು ಕ್ಷಮಿಸಬಾರದು. ಪಾಠ ಕಲಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement