ವಿಜಯಪುರ: ಆರು ಮಂದಿಯ ಬರ್ಬರ ಹತ್ಯೆ; 12 ಮಂದಿ ವಿರುದ್ಧ FIR ದಾಖಲು

ಸಂತ್ರಸ್ತ ಕುಟುಂಬದ ಸದಸ್ಯರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಹತ್ಯೆಗೀಡಾದವರಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಹಾಗೂ ಒಬ್ಬ ಕಾರ್ಮಿಕ ಸೇರಿದ್ದಾರೆಂದು ತಿಳಿದುಬಂದಿದೆ.
File photo
ಸಂಗ್ರಹ ಚಿತ್ರ
Updated on

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದ್ದ ಆರು ಮಂದಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಇದೂವರೆಗೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಕುಟುಂಬದ ಸದಸ್ಯರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಹತ್ಯೆಗೀಡಾದವರಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಹಾಗೂ ಒಬ್ಬ ಕಾರ್ಮಿಕ ಸೇರಿದ್ದಾರೆಂದು ತಿಳಿದುಬಂದಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಬಹುತೇಕ ಆರೋಪಿಗಳು ಚಡಚಣ ಭಾಗದ ಪ್ರಭಾವಿ ವ್ಯಕ್ತಿಯಾಗಿರುವ ಕಲ್ಲಣಗೌಡ ಪಾಟೀಲ್ ಕುಟುಂಬದವರಾಗಿದ್ದಾರೆಂದು ತಿಳಿದುಬಂದಿದೆ. ಕಲ್ಲಣಗೌಡ ಪಾಟೀಲ್ ಅವರನ್ನು ಪ್ರಕರಣದ ಮೊದಲನೇ ಆರೋಪಿಯನ್ನಾಗಿ (ಎ1) ಉಲ್ಲೇಖಿಸಲಾಗಿದೆ.

ಗೋವಿಂದಪುರ ಗ್ರಾಮದಲ್ಲಿ ಆಸ್ತಿ ವಿವಾದದ ಹಿನ್ನೆಲೆ ಈ ಭೀಕರ ಘಟನೆ ನಡೆದಿದ್ದು, ಆರು ಮಂದಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

File photo
ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಆರು ಜನರ ಭೀಕರ ಹತ್ಯೆ; Video

ಬಿಗಿ ಭದ್ರತೆಯಲ್ಲಿ ಅಂತ್ಯಕ್ರಿಯೆ

ಈ ನಡುವೆ ಶನಿವಾರ ಗೋವಿಂದಪುರ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಯನ್ನು ಬಿಗಿ ಪೊಲೀಸ್ ಭದ್ರತೆಯ ನಡುವೆ ನೆರವೇರಿಸಲಾಗಿದೆ.

ಮೃತಪಟ್ಟ ಆರು ಮಂದಿಯಲ್ಲಿ ಐವರ ಅಂತ್ಯಸಂಸ್ಕಾರ ಹಿಂದೂ ಸಂಪ್ರದಾಯದಂತೆ ದಹನದ ಮೂಲಕ ನಡೆದರೆ, ಮುಸ್ಲಿಂ ಸಮುದಾಯಕ್ಕೆ ಸೇರಿದ ಓರ್ವ ವ್ಯಕ್ತಿಯನ್ನು ಸಮಾಧಿ ಮಾಡಲಾಗಿದೆ.

ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ತನಿಖೆ ಚುರುಕುಗೊಂಡಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com