

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಬಿ ರಿಪೋರ್ಟ್ ನಲ್ಲಿ ಹಲವು ಅಂಶಗಳನ್ನು ಲೋಕಾಯುಕ್ತ ತನಿಖಾಧಿಕಾರಿಗಳು ಪರಿಗಣಿಸಿಲ್ಲ. ಇಡಿ ತನಿಖೆಯಲ್ಲಿ ಬೆಳಕಿಗೆ ಬಂದ ಅಂಶಗಳನ್ನು ಪರಿಗಣಿಸಿಲ್ಲ. ಕಾನೂನು ಬಾಹಿರ ಡಿನೋಟಿಫಿಕೇಷನ್ ಬಗ್ಗೆ ತನಿಖೆ ಸಮರ್ಪಕವಾಗಿಲ್ಲ. ಭೂ ಪರಿವರ್ತನೆ ಕಾನೂನುಬಾಹಿರವೆಂಬುದನ್ನು ಪರಿಗಣಿಸಿಲ್ಲ ಎಂದು ಜಾರಿ ನಿರ್ದೇಶನಾಲಯದ ಪರ ಎಎಸ್ಜಿ ಅರವಿಂದ್ ಕಾಮತ್ ವಾದ ಮಂಡಿಸಿದ್ದಾರೆ.
ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.
2025ರ ಫೆಬ್ರವರಿ 12ರಂದು ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ಬೆಂಗಳೂರಿನ 82ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ(ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಬಿ ರಿಪೋರ್ಟ್ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ.
ಆದರೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿರುವ 'ಬಿ' ರಿಪೋರ್ಟ್ ಅನ್ನು ಪಡೆದು ಪರಿಶೀಲಿಸಬೇಕು ಮತ್ತು ಅದನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಅಲ್ಲದೆ, ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವರ್ಗಾಯಿಸಬೇಕು. ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯ ಕೃಷ್ಣ ಕೋರಿದ್ದರು. ಆದ್ರೆ, ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಹ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣವು ಈಗ ಹೊಸ ಕಾನೂನು ತಿರುವು ಪಡೆದಿದೆ.