

ಬೆಂಗಳೂರು: ಬೆಂಗಳೂರಿನ ಪಿಂಕ್ ಲೈನ್ನ ಕಾಳೇನ ಅಗ್ರಹಾರ–ತಾವರೆಕೆರೆ ನಡುವಿನ 7.5 ಕಿ.ಮೀ ಮಾರ್ಗ ಉದ್ಘಾಟನೆಗೆ ಸಂಪೂರ್ಣ ಸಿದ್ಧವಾಗಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ ಎನ್ನಲಾಗಿದೆ.
ಸೆಪ್ಟೆಂಬರ್ನಲ್ಲಿ ಉದ್ಘಾಟನೆಗೆ ಸಂಬಂಧಿಸಿದಂತೆ ಭಾರತ ಸರ್ಕಾರದಿಂದ ದಿನಾಂಕ ನಿಗದಿಯಾಗುವ ನಿರೀಕ್ಷೆಯಿದೆ ಎಂದು ತಿಳಿಸಲಾಗಿದೆ.
ಈ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಎಕ್ಸ್ ನಲ್ಲಿ ಮಾಹಿತಿ ನೀಡಿದ್ದು, 'ಉದ್ಘಾಟನೆಗೂ ಮುನ್ನ ಮಾರ್ಗದ ಸಿದ್ಧತೆ ಹಾಗೂ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಲು ಬುಧವಾರ ಸಂಸದ ತೇಜಸ್ವಿ ಸೂರ್ಯ, ಶಾಸಕ ಎಂ. ಕೃಷ್ಣಪ್ಪ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಪಿ.ಸಿ. ಜಾಫರ್ ಹಾಗೂ ಅಧಿಕಾರಿಗಳೊಂದಿಗೆ ಟ್ರಯಲ್ ರನ್ ನಡೆಸಲಾಯಿತು' ಎಂದು ಟ್ವೀಟ್ ಮಾಡಿದ್ದಾರೆ.
ಟ್ರಯಲ್ ರನ್ ವೇಳೆ ಮಾರ್ಗದ ವಿವಿಧ ಹಂತಗಳ ಸಿದ್ಧತೆ, ಸುರಕ್ಷತಾ ವ್ಯವಸ್ಥೆಗಳು ಹಾಗೂ ಸಾರ್ವಜನಿಕ ಸೇವೆ ಆರಂಭಿಸುವ ಮುನ್ನ ಪೂರ್ಣಗೊಳಿಸಬೇಕಿರುವ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಾಯಿತು.
7.5 ಕಿ.ಮೀ ಉದ್ದದ ಈ ಮಾರ್ಗ ಸಾರ್ವಜನಿಕರಿಗೆ ಮುಕ್ತವಾದ ಬಳಿಕ, ಈ ಭಾಗದ ಪ್ರಯಾಣಿಕರಿಗೆ ಮೆಟ್ರೋ ಸಂಪರ್ಕ ಮತ್ತಷ್ಟು ಸುಲಭವಾಗಲಿದೆ.
ಪ್ರಮುಖ ವಸತಿ ಪ್ರದೇಶಗಳು ಹಾಗೂ ನಗರದ ಇತರ ಭಾಗಗಳಿಗೆ ವೇಗದ ಸಾರ್ವಜನಿಕ ಸಾರಿಗೆ ಸಂಪರ್ಕ ಕಲ್ಪಿಸುವಲ್ಲಿ ಈ ಮಾರ್ಗ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.
ಉದ್ಘಾಟನೆಗೆ ಅಗತ್ಯವಿರುವ ಅಂತಿಮ ಪ್ರಕ್ರಿಯೆಗಳು ಪೂರ್ಣಗೊಳ್ಳುತ್ತಿದ್ದು, ಸೆಪ್ಟೆಂಬರ್ನಲ್ಲೇ ಮಾರ್ಗ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.