

ಬೆಂಗಳೂರು: ಕರ್ನಾಟಕದ ನೀರಿನ ಹಕ್ಕುಗಳ ರಕ್ಷಣೆ ಹಾಗೂ ರಾಜ್ಯದ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಕಾನೂನುಬದ್ಧ ಅನುಮೋದನೆಗಳನ್ನು ತ್ವರಿತಗೊಳಿಸುವ ಕುರಿತು ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಗಳವಾರ ನವದೆಹಲಿಯಲ್ಲಿ ರಾಜ್ಯದ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಉನ್ನತ ಮಟ್ಟದ ಸಮಾಲೋಚನಾ ಸಭೆ ನಡೆಸಿದರು.
ಕಾವೇರಿ, ಕೃಷ್ಣಾ, ಮಹದಾಯಿ ಮತ್ತು ಪೆನ್ನೈಯಾರ್ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಗಳ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಾಯಿತು. ಅಲ್ಲದೆ, ತಮಿಳುನಾಡಿನ ಕಾವೇರಿ-ವೈಗೈ-ಗುಂಡಾರ್ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚೆ ನಡೆಯಿತು.
ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸುಪ್ರೀಂ ಕೋರ್ಟ್ನ ಹಿರಿಯ ವಕೀಲರಾದ ಕುಶ್ವಿಂದರ್ ಮೊಹ್ರಾ ಹಾಗೂ ಮಯಾಂಕ್ ಜೈನ್, ಸುಪ್ರೀಂ ಕೋರ್ಟ್ ಅಡ್ವೊಕೇಟ್-ಆನ್-ರೆಕಾರ್ಡ್ ನಿಶಾಂತ್ ಪಾಟೀಲ್, ಐಎಸ್ಡಬ್ಲ್ಯು ಮುಖ್ಯ ಎಂಜಿನಿಯರ್ ನಂದೀಶ್, ಉಪ ತಾಂತ್ರಿಕ ಸಲಹೆಗಾರ ಅನಂತ್ ಹಾಗೂ ದೆಹಲಿ ಐಎಸ್ಡಬ್ಲ್ಯು ಕಾರ್ಯನಿರ್ವಾಹಕ ಎಂಜಿನಿಯರ್ ಸ್ವೀಟಿ ಭಾಗವಹಿಸಿದ್ದರು.
ಸಭೆಯಲ್ಲಿ ಕರ್ನಾಟಕದ ನೀರಿನ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಚಲುವರಾಯಸ್ವಾಮಿ ಅವರು ಕಾನೂನು ತಂಡಕ್ಕೆ ಸೂಚಿಸಿದರು.
ವಿಶೇಷವಾಗಿ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ವಿವರವಾದ ಯೋಜನಾ ವರದಿ ಹಾಗೂ ಅರಣ್ಯ ಅನುಮತಿ ಪ್ರಕ್ರಿಯೆಗಳನ್ನು ವಿವಿಧ ಹಂತಗಳಲ್ಲಿ ಮುಂದುವರಿಸಿದ್ದು, ಬಾಕಿ ಇರುವ ಅನುಮೋದನೆಗಳನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮೇಕೆದಾಟು ಯೋಜನೆಗೆ ಅನುಮೋದನೆ ಪಡೆಯುವ ಪ್ರಕ್ರಿಯೆಯನ್ನು ವೇಗಗೊಳಿಸುವ ಕುರಿತು ಚರ್ಚಿಸಲು ಸಚಿವರು ಬುಧವಾರ ಬೆಳಗ್ಗೆ 10.30ಕ್ಕೆ ಕೇಂದ್ರ ಜಲ ಆಯೋಗದ ಅಧ್ಯಕ್ಷ ಅನೂಪ್ ಪ್ರಸಾದ್ ಅವರನ್ನು ಭೇಟಿ ಮಾಡಲಿದ್ದಾರೆ.